“ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಶಾಲಾ ಹಂತದಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ಯೋಜನೆಗೆ ಶಾಲಾ ಮುಖ್ಯ ಶಿಕ್ಷಕ ಮತ್ತು ಇನ್ನಿತರ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ” ಎಂದು ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಅವರು ತಿಳಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಕ್ಕೆ ಅನುಗುಣವಾಗಿ ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿಯಲ್ಲಿದೆ. ಈ ಯೋಜನೆಗೆ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ” ಎಂದು ಹೇಳಿದ್ದಾರೆ.
“ಆದರೆ, ಕಲಬುರಗಿ ಜಿಲ್ಲೆಯ ಒಂದು ಪ್ರಕರಣ ಬಳಸಿಕೊಂಡು ಶಿಕ್ಷಣ ಇಲಾಖೆಯ ಬಿಸಿಯೂಟ ಯೋಜನೆಯ ವೈಫಲ್ಯಗಳಿಗೆ ಶಾಲೆಯ ಮುಖ್ಯ ಶಿಕ್ಷಕರನ್ನು ಹೊಣೆ ಮಾಡುವ ಸುತ್ತೋಲೆ ಹೊರಡಿಸಿರುವುದು ಅನೇಕ ಗೊಂದಲಗಳಿಗೆ ಕಾರಣವಾಗಿದೆ. ಈ ಬಿಸಿಯೂಟ ಯೋಜನೆಯು ಶಾಲೆಯ ಮುಖ್ಯ ಶಿಕ್ಷಕರಿಗೆ ಅಥವಾ ಇನ್ನುಳಿದ ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಯಾಗಿದೆ. ಜತೆಗೆ, ಹೆಚ್ಚುವರಿ ಕೆಲಸವಾಗಿದೆ” ಎಂದು ತಿಳಿಸಿದ್ದಾರೆ.
“ಶಿಕ್ಷಣ ಇಲಾಖೆ ಬಿಸಿಯೂಟ ಯೋಜನೆಯ ಬಗ್ಗೆ ನಾನಾ ರೀತಿ ಸುತ್ತೋಲೆ ಹೊರಡಿಸುವ ಕಾರಣ ಶಿಕ್ಷಕರನ್ನು ಬೋಧಕೇತರ ಚಟುವಟಿಕೆಗಳಲ್ಲಿ ಭಾಗಿ ಆಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕುಂಠಿತವಾಗಲು ಅವಕಾಶ ನೀಡುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಈ ಜಂಟಿ ಯೋಜನೆಯು ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ ಆರೋಗ್ಯ ಸಂರಕ್ಷಣೆ ಮಾಡುವ ಸಾಮಾಜಿಕ ಕಳಕಳಿ ಹೊಂದಿದೆ. ಇಡೀ ರಾಜ್ಯದಲ್ಲಿ ಬಹುತೇಕ ಶಾಲಾ ಶಿಕ್ಷಕರ ಮುಖಾಂತರ ಈ ಯೋಜನೆ ಜಾರಿಗೆ ತರಲಾಗಿದೆ” ಎಂದು ವಿವರಿಸಿದ್ದಾರೆ.
“ಬಿಸಿಯೂಟ ಯೋಜನೆಯ ಜವಾಬ್ದಾರಿಯನ್ನು ಕೆಲವೆಡೆ ಖಾಸಗಿಯವರಿಗೆ ನೀಡಲಾಗಿದೆ. ಬಿಸಿಯೂಟ ಯೋಜನೆಯಲ್ಲಿ ಆಹಾರ ಪದಾರ್ಥಗಳ ಶೇಖರಣೆ, ಅಡುಗೆಯ ಸಿಬ್ಬಂದಿ ಜತೆಗೆ ಸಂಯೋಜನೆ, ಬಿಸಿಯೂಟ ತಯಾರಿಕೆ ಮತ್ತು ವಿತರಣೆ, ಸುರಕ್ಷತಾ ಹಾಗೂ ಸ್ವಚ್ಛತಾ ವ್ಯವಸ್ಥೆಯ ಅಳವಡಿಕೆ ಮತ್ತು ಮೇಲ್ವಿಚಾರಣೆ, ಎಸ್ಡಿಎಂಸಿ ಸಮಿತಿ ಮತ್ತು ಷೋಷಕರೊಂದಿಗೆ ಹೊಂದಾಣಿಕೆ, ಯೋಜನೆಯ ಹಣಕಾಸು ನಿರ್ವಹಣೆ ಇತ್ಯಾದಿ ಕೆಲಸಗಳು ಈ ಬಿಸಿಯೂಟ ಯೋಜನೆಯಲ್ಲಿವೆ. ಇದಕ್ಕಾಗಿಯೇ ಶಿಕ್ಷಕರನ್ನು ಸಮಯ ನೀಡಬೇಕಾಗುತ್ತದೆ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನವೆಂಬರ್ನಲ್ಲಿ ₹10,86 ಕೋಟಿ ಮೌಲ್ಯದ ಮಾದಕ ವಸ್ತು ವಶ : ಬಿ. ದಯಾನಂದ್
“ಇದರಿಂದ ಸ್ವಾಭಾವಿಕವಾಗಿ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗುತ್ತವೆ. ಇದರ ಜತೆಗೆ ಬಿಸಿಯೂಟ ಯೋಜನೆಯ ಲೋಪ ಅಥವಾ ವಿಫಲತೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡುವ ಸುತ್ತೋಲೆಯಿಂದ ಶಿಕ್ಷಕರು ಮತ್ತಷ್ಟು ಮಾನಸಿಕ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಇದರಿಂದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗಿ ಮಕ್ಕಳ ವಿಕಸನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ತಿಳಿಸಿದ್ದಾರೆ.
“ಶಿಕ್ಷಣ ಇಲಾಖೆ ಪದೇಪದೆ ಇಂತಹ ಸುತ್ತೋಲೆ ಹೊರಡಿಸುವುದರ ಮೂಲಕ ಶಾಲಾ ಶಿಕ್ಷಕರಲ್ಲಿ ಗೊಂದಲ ಉಂಟು ಮಾಡುತ್ತಿದೆ. ಶಾಲಾ ಶಿಕ್ಷಕರನ್ನು ಬೋಧನಾ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಅವಕಾಶ ನೀಡಿದರೆ, ಇದರಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗುತ್ತದೆ. ಶಿಕ್ಷಕರನ್ನು ಬೋಧಕೇತರ ಕಾರ್ಯದಲ್ಲಿ ಹೊಣೆಗಾರರನ್ನಾಗಿ ಮಾಡುವುದು ಸಮಂಜಸವಾಗಿರುವುದಿಲ್ಲ. ಹಾಗಾಗಿ, ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಶೈಕ್ಷಣಿಕ ಹಿತದೃಷ್ಟಿಯಿಂದ ಈಗ ನೀಡಿರುವ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಲು ಆದೇಶಿಸಬೇಕು” ಎಂದು ಮನವಿ ಮಾಡಿದ್ದಾರೆ.