ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ ಆರ್ ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ಅಜಿತ್ ರೈ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದ್ದರು. ಈ ಶೋಧ ಕಾರ್ಯ ಗುರುವಾರ ತಡ ರಾತ್ರಿಯವರೆಗೂ ನಡೆದಿತ್ತು.
ತನಿಖೆ ವೇಳೆ ಆರೋಪಿ ಅಜಿತ್ ರೈ ₹500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿರುವುದು ತಿಳಿದುಬಂದಿತ್ತು. ಬಳಿಕ, ಅಜಿತ್ ರೈ ಅವರನ್ನು ಗುರುವಾರ ಲೋಕಾಯುಕ್ತ ತನಿಖಾ ತಂಡ ಬಂಧನ ಮಾಡಿತ್ತು.
ಶುಕ್ರವಾರ ಆರೋಪಿಯನ್ನು ಸಿಟಿ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಳಿಕ ಲೋಕಾಯುಕ್ತ ಪೊಲೀಸರು ನ್ಯಾಯಲಯದ ಮುಂದೆ ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.
ಲೋಕಾಯುಕ್ತ ಪೊಲೀಸರ ಮನವಿಗೆ ಒಪ್ಪಿಗೆ ಸೂಚಿಸಿದ ನ್ಯಾಯಾಧೀಶರು ಏಳು ದಿನಗಳ ವಿಚಾರಣೆಗೆ ಅವಕಾಶ ನೀಡಿ ಆದೇಶ ಹೊಡಿಸಿದ್ದಾರೆ.