ರಾಜ್ಯಾದ್ಯಂತ ವಿಧಾನಸಭಾ ಚುನಾವಣೆ ಅಬ್ಬರ ಮತ್ತು ದ್ವಿತೀಯ ಪಿಯುಸಿ ಫಲಿತಾಂಶದ ಸಡಗರ ಹೆಚ್ಚಾಗಿದೆ. ಈ ಮಧ್ಯೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 28ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದೆ.
2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಅರ್ಜಿ ಕೊನೆಯ ದಿನ, ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯಿರುವ ಸುತ್ತೋಲೆ ಹೊರಡಿಸಿದೆ.
ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, 2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಎಲ್ಲ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಆದೇಶಿಸಿದೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಏ.21ರಿಂದ 28ರವರೆಗೆ ಅವಕಾಶ ಕಲ್ಪಿಸಲಾಗಿದೆ. ಏ. 28ರವರೆಗೂ ಮಾತ್ರ ದಂಡ ರಹಿತ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 4ರ ಒಳಗೆ ದಂಡ ಸಹಿತ ಶುಲ್ಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮರು ಮೌಲ್ಯಮಾಪನದ ಫಲಿತಾಂಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಕೆಎಸ್ಇಎಬಿ ಅಧ್ಯಕ್ಷ ರಾಮಚಂದ್ರನ್ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯು ಫಲಿತಾಂಶ | ಅನುತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆ
ಫಲಿತಾಂಶದ ಪ್ರತಿಯನ್ನು ಪಿಯು ಪರೀಕ್ಷಾ ಪೋರ್ಟಲ್ ಮೂಲಕ ಆಯಾ ವಿದ್ಯಾರ್ಥಿಗಳಿಗೆ ಕಳುಹಿಸಲಾಗುವುದು. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವುದಿಲ್ಲ. ಮಂಡಳಿ ನೀಡಿದ ಫಲಿತಾಂಶದ ಪಟ್ಟಿ ಆಧಾರದಲ್ಲಿ ಹಾಗೂ ಉತ್ತೀರ್ಣರಾದವರು ಫಲಿತಾಂಶ ತಿರಸ್ಕರಿಸಿ, ಫಲಿತಾಂಶದ ಪ್ರತಿ ಸಲ್ಲಿಸಿ ಪೂರಕ ಪರೀಕ್ಷೆ ತೆಗೆದುಕೊಳ್ಳಬಹುದು.
ಶುಲ್ಕದ ವಿವರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳು ಪಾವತಿಸಬೇಕಾದ ಪರೀಕ್ಷಾ ಶುಲ್ಕ,ಒಂದು ವಿಷಯಕ್ಕೆ-140 ರೂಪಾಯಿ. ಎರಡು ವಿಷಯಕ್ಕೆ- 270 ರೂಪಾಯಿ. ಮೂರು ಅಥವಾ ಹೆಚ್ಚಿನ ವಿಷಯಗಳು- 400 ರೂಪಾಯಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ಪಡೆಯಬೇಕಾದ ಅಂಕಪಟ್ಟಿ ಶುಲ್ಕ- 50 ರೂಪಾಯಿ ಪಾವತಿಸಬೇಕಾಗಿದೆ.