ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಬಿರುಸಿನ ತಯಾರಿ ನಡೆಯುತ್ತಿದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಶಿಕ್ಷಕರ ವರ್ಗಾವಣೆ ಮಾಡದಿರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಚುನಾವಣ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುವ ಕಾರಣ, ಆಯೋಗದ ಸೂಚನೆ ಮೇರೆಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಮುಂದೂಡಲಾಗಿದೆ. ಒಟ್ಟು 88,324 ಶಿಕ್ಷಕರು ವರ್ಗಾವಣೆಗೆ ಅರ್ಜಿ ಹಾಕಿದ್ದಾರೆ.
ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ತಿದ್ದುಪಡಿ ತಂದ ನಂತರ ಕಳೆದ ಡಿಸೆಂಬರ್ನಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಇಲಾಖೆ ಸುತ್ತೋಲೆ ಹೊರಡಿಸಿತ್ತು. ಮಾರ್ಚ್ನೊಳಗೆ ವರ್ಗಾವಣೆ ಪಕ್ರಿಯೆ ಮುಕ್ತಾಯಗೊಳಿಸುವಂತೆ ವೇಳಾಪಟ್ಟಿ ಪ್ರಕಟಿಸಿತ್ತು. ಆದರೆ, ಹೆಚ್ಚುವರಿ ಶಿಕ್ಷಕರ ನಿಯೋಜನೆ ಸೇರಿದಂತೆ ನಾನಾ ಕಾರಣಗಳಿಂದ ವರ್ಗಾವಣೆ ಪ್ರಕ್ರಿಯೆ ಎರಡು ಬಾರಿ ಅರ್ಧಕ್ಕೆ ನಿಂತಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯ ನಂತರ ಕೆಲ ದಿನಗಳ ಹಿಂದಷ್ಟೇ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಒಪ್ಪಿಗೆ ನೀಡಿದ್ದ ಶಿಕ್ಷಣ ಇಲಾಖೆ, ವರ್ಗಾವಣೆ ತಯಾರಿ ಆರಂಭಿಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆಗೆ ಅವಕಾಶ ನೀಡಲಾಗಿದೆ. ಆದರೆ, ಚುನಾವಣೆ ಪ್ರಕ್ರಿಯೆಗೆ ಅಡ್ಡಿ ಆಗಬಾರದು ಎಂದು ವರ್ಗಾವಣೆಗೊಂಡ ಶಿಕ್ಷಕರಿಗೆ ಜೂನ್ 1ರ ಬಳಿಕ ನಂತರ ನಿಯುಕ್ತಿಗೊಂಡ ಸ್ಥಳಕ್ಕೆ ಹಾಜರಾಗುವ ಷರತ್ತು ವಿಧಿಸುತ್ತೇವೆ ಎಂದು ಶಾಲಾ ಶಿಕ್ಷಣ ಇಲಾಖೆಯು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ.
ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಮೈಸೂರು ವಿವಿಗೆ ವಿದೇಶಿ ವಿದ್ಯಾರ್ಥಿಗಳ ಕೊರತೆ