“ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಡಿಆರ್ಆರ್ ಕಾಲೇಜಿನಲ್ಲಿ ನಡೆಯಲಿದ್ದು, ಎಣಿಕೆ ಕಾರ್ಯವನ್ನು ಸುಗಮ, ಪಾರದರ್ಶಕ ಹಾಗೂ ಅತ್ಯಂತ ಸುರಕ್ಷಿತವಾಗಿ ನಡೆಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು” ಎಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಸೂಚಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಮತ ಎಣಿಕೆ ಕೇಂದ್ರದ ಸುತ್ತ 100 ಮೀಟರ್ ವ್ಯಾಪ್ತಿಯನ್ನು ವಾಹನ ಮುಕ್ತ ಮತ್ತು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಲಾಗಿದ್ದು, ಸಿಆರ್ಪಿಸಿ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮೂರು ಹಂತದ ಭದ್ರತಾ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ಅನುಮತಿ ಪಡೆದ ವಾಹನಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತದೆ” ಎಂದು ತಿಳಿಸಿದರು.
“ಮೇ 4ರಂದು ನಡೆಯಲಿರುವ ಮತ ಎಣಿಕೆಯ ಹಿನ್ನೆಲೆ ದಾವಣಗೆರೆ ತಾಲ್ಲೂಕು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು, ಬಾರ್, ರೆಸ್ಟೋರೆಂಟ್, ಹೋಟೆಲ್, ಕ್ಲಬ್ ಹಾಗೂ ಢಾಬಾಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ‘ಶುಷ್ಕ ದಿವಸ’ ಘೋಷಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

“ಮತ ಎಣಿಕೆ ಸಿಬ್ಬಂದಿ ಹಾಗೂ ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಮತ್ತು ಬಿಆರ್ಸಿ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಮೊಬೈಲ್ಗಳ ಸುರಕ್ಷಿತ ಸಂಗ್ರಹಕ್ಕಾಗಿ ಟೋಕನ್ ವ್ಯವಸ್ಥೆಯೊಂದಿಗೆ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು” ಎಂದು ಹೇಳಿದರು.
This video cannot be played in your browser. Open the video directly
“ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಎಣಿಕೆ ಕೇಂದ್ರದ ಮೇಲ್ಛಾವಣಿ ಹಾಗೂ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಪರಿಶೀಲಿಸುವಂತೆ ಲೋಕೋಪಯೋಗಿ ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಮತ್ತು ಕವರೇಜ್ನ್ನು ಪರಿಶೀಲಿಸಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇರದಂತೆ ಕ್ರಮಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಆರೋಗ್ಯ ಇಲಾಖೆಯಿಂದ ವೈದ್ಯಕೀಯ ತಂಡ ಮತ್ತು ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ಅಗ್ನಿ ಅವಘಡ ತಡೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ” ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಮಾತನಾಡಿ, “ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಶಸ್ತ್ರ ಮೀಸಲು ಪಡೆ ಮತ್ತು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಚನಾನಂದ ಶ್ರೀಗಳಿಂದ ಪಂಚಮಸಾಲಿ ಸಮಾಜದ ಮಾನ ಬೀದಿಗೆ ಬಿದ್ದಿದೆ; ಟ್ರಸ್ಟಿ ಉಮಾಪತಿ
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






