ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.
ಸೌಹಾರ್ದ ಕರ್ನಾಟಕ ವೇದಿಕೆ, ಡಿವೈಎಫ್ಐ, ಎಸ್ಎಫ್ಐ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳು ಜಂಟಿಯಾಗಿ ಮಂಗಳವಾರ ಹುಮನಾಬಾದ್ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಬಸವ ಭಕ್ತರನ್ನು ʼಬಸವ ತಾಲಿಬಾನಿʼ ಎಂದು ಪದ ಪ್ರಯೋಗ ಮಾಡಿ ಅವಮಾನಿಸಿರುವುದು ಹಾಗೂ ಬಸವತತ್ವ ಮತ್ತು ಸಂಸ್ಕೃತಿಯನ್ನು ನಾಡಿನಾದ್ಯಂತ ಪ್ರಚಾರ ಮಾಡುತ್ತಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಸುಪ್ರೀಂ ಕೋರ್ಟ್ನಿಂದಲೂ ಟೀಕೆಗೆ ಗುರಿಯಾಗಿರುವ ಕನೇರಿ ಸ್ವಾಮೀಜಿಯವರ ನಡೆ ಬಸವ ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿರುವ ಕನೇರಿ ಸ್ವಾಮೀಜಿಗೆ ಬಸವಕಲ್ಯಾಣ ಪ್ರವೇಶ ವಿರೋಧವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
“ಸರ್ಕಾರ ಹಾಗೂ ಜಿಲ್ಲಾಡಳಿತವು ಬಸವ ಭಕ್ತರ ಭಾವನೆಗಳು ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಕನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ನೀಡದಂತೆ ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.
ಒಂದು ವೇಳೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದಲ್ಲಿ ಬಸವ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇರುವುದರ ಜೊತೆಗೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಎದುರಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಬೀದರ್ | ಕಾನೂನು ಸುವ್ಯವಸ್ಥೆಗೆ ಧಕ್ಕೆ : ಇಬ್ಬರು ರೌಡಿಶೀಟರ್ಗಳ ಗಡಿಪಾರು
ಈ ಸಂದರ್ಭದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆ ಜಿಲ್ಲಾ ಸಂಚಾಲಕ ಪ್ರಭು ಸಂತೋಷಕರ್, ಡಿವೈಎಫ್ಐ ಜಿಲ್ಲಾ ಸಂಚಾಲಕ ಶಶಿಕಾಂತ ಡಾಂಗೆ, ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ರೇಷ್ಮಾ ಹಂಸರಾಜ್, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ಎಸ್ಎಫ್ಐ ಜಿಲ್ಲಾ ಸಂಚಾಲಕ ಸೈಯದ್ ಮೇರಾಜೋದ್ದೀನ್, ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಇಸಾಮೋದ್ದೀನ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಂಚಾಲಕ ಗೌಸೋದ್ದೀನ್, ರೈತ ಸಂಘದ ಮುಖಂಡ ಖಾಸೀಂ ಅಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




