- ಅಬ್ದುಲ್ ಅಜೀಜ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಡಿಕೆಶಿ
- ಮಳವಳ್ಳಿಯ ಪ್ರಭಾವಿ ನಾಯಕ ಬಿ ಸೋಮಶೇಖರ್
ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿದ್ದು, ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಬಿ ಸೋಮಶೇಖರ್, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಆಸಿಫ್ ಸೇಠ್, ಅಬ್ದುಲ್ ಅಜೀಜ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಲವು ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, “ಇಂದು ಬಿಜೆಪಿ ಹಾಗೂ ದಳವನ್ನು ತೊರೆದು ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿ, ಮೈಸೂರು ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದರು.
“ಸೋಮಶೇಖರ್ ಅವರು ಸಿದ್ದರಾಮಯ್ಯ ಅವರ ಜತೆ ಶಾಸಕರಾಗಿ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರದೇ ಆದ ಸಾಧನೆ ಮಾಡಿದ್ದಾರೆ” ಎಂದು ಹೇಳಿದರು.
“ಬಿಜೆಪಿ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನಮ್ಮಂತಹವರಿಗೆ ಬಿಜೆಪಿಯಲ್ಲಿ ಸ್ಥಾನವಿಲ್ಲ ಎಂದು ಯಾವುದೇ ಷರತ್ತು ಇಲ್ಲದೆ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದಾರೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ ಅಂತ್ಯ; ದೂರು ದಾಖಲಿಸಿದ ಚುನಾವಣಾಧಿಕಾರಿಗಳು
“ಬಿಜೆಪಿ ಸರ್ಕಾರ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದ ಆಸಿಫ್ ಸೇಠ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಬಹಳ ತೊಂದರೆ ಆಗಿದೆ. ಇಷ್ಟೆಲ್ಲ ಆದ ನಂತರ ನಾನು ಯಾವ ಮುಖ ಇಟ್ಟುಕೊಂಡು ಬಿಜೆಪಿಯಲ್ಲಿ ಮುಂದುವರಿಯಲಿ ಎಂದು ನಮ್ಮ ಜತೆ ಬಂದಿದ್ದಾರೆ” ಎಂದು ಹೇಳಿದರು.
“ಬಸವೇಗೌಡರು ಮೂಡಾ ಅಧ್ಯಕ್ಷರಾಗಿದ್ದರು, ಅವರು ಅನೇಕ ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರೂ ಕೂಡ ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ” ಎಂದು ಹೇಳಿದರು.
ಅಬ್ದುಲ್ ಅಜೀಜ್ ಅವರು 2018ರಲ್ಲಿ ದಳದ ಅಭ್ಯರ್ಥಿಯಾಗಿದ್ದರು. ಅವರು ಕೂಡ ಇಂದು ಬೇಷರತ್ತಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಹೀಗೆ ಅನೇಕ ನಾಯಕರು ಪಕ್ಷ ಸೇರುತ್ತಿದ್ದು, ನಾವು ಎಲ್ಲಾ ನಾಯಕರನ್ನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ನರೇಂದ್ರಸ್ವಾಮಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.