ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಮತಬೇಟೆಗೆ ಇಳಿದಿವೆ. ಈ ನಡುವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಅವರು ಮುಖಾಮುಖಿಯಾದರು.
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಿರುಸಿನ ಪ್ರಚಾರ ನಡೆದಿದೆ. ಒಂದೇ ದಿನ ಎರಡು ಪಕ್ಷದ ಪ್ರಮುಖ ಮೂವರು ನಾಯಕರ ಮುಖಾಮುಖಿಯಾಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮೂವರು ನಾಯಕರು ಎದುರುಗೊಂಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಿಂದ ಬಂದಿಳಿದು ಚಿಕ್ಕೋಡಿಯತ್ತ ಹೊರಟಿದ್ದರು. ಅದೇ ರೀತಿ, ಬಸವರಾಜ ಬೊಮ್ಮಾಯಿ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿಯತ್ತ ತೆರಳುತ್ತಿದ್ದರು. ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಿ ಬಿ ಇನಾಮದಾರ ಅವರಿಗೆ ಅಂತಿಮ ನಮನ ಸಲ್ಲಿಸಿ ನೇಗಿನಹಾಳದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಮುಖಾಮುಖಿಯಾಗಿ ಪರಸ್ಪರ ಹಸ್ತಲಾಘವ ಮಾಡಿಕೊಂಡಿದ್ದಾರೆ. ಇಬ್ಬರ ಫೋಟೋ ಹಂಚಿಕೊಂಡಿರುವ ಸಿದ್ದರಾಮಯ್ಯ, “ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ರಾಜ್ಯ ರಾಜಕೀಯದ ಪ್ರಮುಖ ವಿಚಾರಗಳ ಕುರಿತಾಗಿ ಒಂದಷ್ಟು ಸಮಯ ಸಮಾಲೋಚನೆ ನಡೆಸಿದೆ” ಎಂದಿದ್ದಾರೆ.
ಬೊಮ್ಮಾಯಿ ಬೆನ್ನು ತಟ್ಟಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಎದುರುಗೊಂಡಿದ್ದಾರೆ. ಪರಸ್ಪರ ಮುಗುಳ್ನಗುತ್ತಾ ಹೆಜ್ಜೆ ಹಾಕಿದರು.
ಈ ವೇಳೆ, ಸಿದ್ದರಾಮಯ್ಯ ಅವರು ಬೊಮ್ಮಾಯಿ ಅವರ ಭುಜ ತಟ್ಟಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.