- ಟಿಕೆಟ್ ನೀಡಬಾರದೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದರು
- ಮೂಡಿಗೆರೆ ಕ್ಷೇತ್ರದಿಂದ ದೀಪಕ್ ದೊಡ್ಡಯ್ಯ ಎಂಬುವವರಿಗೆ ಟಿಕೆಟ್
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (ಎಸ್ಸಿ) ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಹಾಲಿ ಶಾಸಕ ಮತ್ತು ಮೂರು ಬಾರಿ ಗೆದ್ದಿರುವ ಎಂ ಪಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ ಮೂಡಿಗೆರೆ ಕ್ಷೇತ್ರದಿಂದ ದೀಪಕ್ ದೊಡ್ಡಯ್ಯ ಎಂಬುವವರಿಗೆ ಟಿಕೆಟ್ ಘೋಷಣೆ ಮಾಡಿದೆ. ಎಂ ಪಿ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸ್ಪೀಕರ್ ಕಾಗೇರಿ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಪರಿಣಾಮ ಬಿಜೆಪಿ ಹೈಕಮಾಂಡ್ ಈ ಬಾರಿ ಎಂ ಪಿ ಕುಮಾರಸ್ವಾಮಿಗೆ ಟಿಕೆಟ್ ನೀಡಲು ನಿರಾಕರಿಸಿದೆ.
ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಎಂ ಪಿ ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಗರಿಗೆ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. “ಆತ್ಮೀಯ ಕ್ಷೇತ್ರದ ಮತದಾರ ಬಂಧುಗಳೇ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಕ್ಷೇತ್ರದ ಎಲ್ಲ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು, ಹೈಕಮಾಂಡ್ ಗೇ ತಪ್ಪಾಗಿ ಕಂಡಿದ್ದು ಪರಮಾಶ್ಚರ್ಯ” ಎಂದಿದ್ದಾರೆ.
“ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷ ಪ್ರತಿ ಸರ್ವೇಯಲ್ಲಿ ಮುನ್ನಡೆಯಿದ್ದರು, ಟಿಕೆಟ್ ನಿರಾಕರಿಸಿದ್ದು ನೋವಿನ ವಿಚಾರ. ಮಳೆಯಿಂದಾಗಿ ಬೆಳೆ ಕಳೆದುಕೊಂಡ ಕ್ಷೇತ್ರದ ರೈತ ಭಾಂದವರಿಗೋಸ್ಕರ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಏಕಾಂಗಿಯಾಗಿ ಧರಣಿ ಕುಳಿತಿದ್ದು ಹೈ ಕಮಾಂಡ್ಗೆ ತಪ್ಪು ಅನ್ನಿಸಿದ್ದು ಇನ್ನೂ ಪರಮಾಶ್ಚರ್ಯ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪ್ರಚೋದನಕಾರಿ ಭಾಷಣ : ನಟಿ ಶೃತಿ ವಿರುದ್ಧ ಪ್ರಕರಣ ದಾಖಲು
“ನಿಮಗೆಲ್ಲಾ ತಿಳಿದಿರುವಂತೆ ಶತ್ರುಗಳಿಗೂ ಕೂಡ ಕೇಡು ಬಯಸದೇ ಎಲ್ಲರನ್ನು ಸದಾ ಗೌರವಿಸುತ್ತಾ ಪ್ರೀತಿಯಿಂದ ಕಾಣುತ್ತಲೇ ಬಂದೆ. ಪಕ್ಷದ ಕಾರ್ಯಕರ್ತರನ್ನು ಬೆಳೆಸಿದ್ದೇನೆ ಹೊರತು ನನ್ನ ಮನೆಯವರನ್ನಲ್ಲ. ಯೋಚಿಸುವ ಶಕ್ತಿ ನಿಮ್ಮಲ್ಲಿದೆ. ನನಗೆ ಶಕ್ತಿ ತುಂಬುವ ಕೈಗಳು ನೀವು. ಇನ್ನು ಮುಂದೆಯೂ ನಿಮ್ಮೊಂದಿಗೆ ಸದಾ ಜೊತೆಯಲ್ಲಿರುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರುತ್ತದೆ ಎಂಬ ನಂಬಿಕೆ ನನಗಿದೆ” ಎಂದು ಭಾವನಾತ್ಮಕ ಸಂದೇಶ ಬರೆದುಕೊಂಡಿದ್ದಾರೆ.
ಟಿಕೆಟ್ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಎಂ ಪಿ ಕುಮಾರಸ್ವಾಮಿ ಇಂದು ಕಾರ್ಯಕರ್ತರು ಮತ್ತು ಬೆಂಬಲಿಗರ ಸಭೆ ಕರೆದಿದ್ದಾರೆ. ಈ ಸಭೆ ಬಳಿಕ ಜೆಡಿಎಸ್ ಸೇರುವ ಸಾಧ್ಯತೆಗಳಿವೆ.