ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬೀಳಲು ಕೆಲವೇ ಗಂಟೆಗಳಿವೆ. ಸದ್ಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ 5,000 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದರೆ, ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಪುಟ್ಟರಂಗಶೆಟ್ಟಿ 4,865 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಸೋಮಣ್ಣ ಅವರು ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಈ ಬಾರಿ, ಆ ಕ್ಷೇತ್ರದಲ್ಲಿ ಟಿಕೆಟ್ ಕಸಿದುಕೊಂಡ ಬಿಜೆಪಿ, ಚಾಮರಾಜನಗರ ಮತ್ತು ವರುಣಾದಲ್ಲಿ ಸೋಮಣ್ಣಗೆ ಟಿಕೆಟ್ ನೀಡಿತ್ತು. ವಲ್ಲದ ಮನಸ್ಸಿನಲ್ಲಿಯೇ ಎರಡೂ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಸೋಮಣ್ಣ ಸದ್ಯ ಎರಡರಲ್ಲೂ ಹಿನ್ನಡೆ ಸಾಧಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಸೋಮಣ್ಣ 12 ಸಾವಿರಕ್ಕೂ ಅಧಿಕ ಮತಗಳಿಂದ ಹಿನ್ನಡೆಯಲ್ಲಿದ್ದಾರೆ.
ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವ ಉದ್ದೇಶ ಬಿಜೆಪಿ ಹೈಕಮಾಂಡ್ಗೆ ಇತ್ತು. ಆದರೆ, ಈ ಕ್ಷೇತ್ರದಲ್ಲಿ ಮಗ ಗೆಲ್ಲುವ ಸಾಧ್ಯತೆಯಿಲ್ಲ ಎನ್ನುವುದು ಖಚಿತವಾಗಿ ತಿಳಿದಿದ್ದ ಕಾರಣ, ಬಿಎಸ್ ಯಡಿಯೂರಪ್ಪ ಹೈಕಮಾಂಡ್ ಮೇಲೆ ಒತ್ತಡ ಹೇರಿದರು. ಅಂತಿಮವಾಗಿ ಬಿ ವೈ ವಿಜಯೇಂದ್ರರಿಗೆ ಶಿಕಾರಿಪುರದ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ವರುಣಾದಲ್ಲಿ ಲಿಂಗಾಯತ ಮುಖದ ಅಗತ್ಯವಿದ್ದ ಕಾರಣ, ಸೋಮಣ್ಣರನ್ನು ಕಣಕ್ಕಿಳಿಸಲಾಗಿತ್ತು.