- ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ವಿದ್ಯಾಕುಮಾರಿ ಆದೇಶ
- ಎಸ್ಸಿ, ಎಸ್ಟಿ ಅನುದಾನ ಮೀಸಲಿಡದೆಯೂ ಕರ್ತವ್ಯ ಲೋಪ
ಮತಗಟ್ಟೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸುವಲ್ಲಿ ವಿಫಲರಾಗಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಗಸ್ವಾಮಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ವಿದ್ಯಾಕುಮಾರಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎಲ್ಲ ಗ್ರಾಮ ಪಂಚಾಯಿತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮತಗಟ್ಟೆಗಳಲ್ಲಿ ರ್ಯಾಂಪ್, ಶೌಚಾಲಯ, ವಿದ್ಯುತ್, ಕುಡಿಯುವ ನೀರು ಇತ್ಯಾದಿ ಮೂಲ ಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಹಾಗೂ ಯಾವ ಮೂಲಭೂತ ಸೌಕರ್ಯ ಇಲ್ಲವೋ ಅಂತಹ ಸೌಲಭ್ಯಗಳನ್ನು ಕಲ್ಪಿಸುವಂತೆ ಹಲವಾರು ಬಾರಿ ಸೂಚಿಸಲಾಗಿತ್ತು ಎಂದು ಜಿಲ್ಲಾ ಪಂಚಾಯಿತಿ ಸಿಇಒ ವಿದ್ಯಾಕುಮಾರಿ ತಿಳಿಸಿದ್ದಾರೆ.
ಏಪ್ರಿಲ್ 19ರಂದು ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಸೌಲಭ್ಯಗಳನ್ನು ಪೂರೈಸದೆ ಕರ್ತವ್ಯಲೋಪ ಎಸಗಿರುವುದರಿಂದ ಪಿಡಿಒ ರಂಗಸ್ವಾಮಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದೊಡ್ಡಗುಣಿ ಗ್ರಾಮ ಪಂಚಾಯಿತಿ 2017 ರಿಂದ 2021ನೇ ಸಾಲಿನವರೆಗೆ ವಸೂಲಾದ ತೆರಿಗೆ ಮೊತ್ತದಲ್ಲಿ ಎಸ್ಸಿ, ಎಸ್ಟಿ ಮತ್ತು ಟಿಎಸ್ಪಿ ಯೋಜನೆಗಳಿಗೆ ಶೇ.25ರಷ್ಟು ಅನುದಾನವನ್ನು ಮೀಸಲಿಡದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ತುಮಕೂರು | 21 ನಾಮಪತ್ರಗಳು ತಿರಸ್ಕೃತ, ಯಾವ ಪಕ್ಷದಿಂದ ಯಾರು ಸ್ಪರ್ಧಿ?
ರಂಗಸ್ವಾಮಿ ಅವರ ಮೇಲಿನ ಆರೋಪಗಳ ಕುರಿತು ಇಲಾಖಾ ವಿಚಾರಣೆ ಬಾಕಿ ಇರಿಸಿ, ಇವರ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಲಾಗಿದೆ. ಅಮಾನತ್ತಿನ ಅವಧಿಯಲ್ಲಿ ನೌಕರರಿಗೆ ಕೆಸಿಎಸ್ಆರ್ 1958ರ ನಿಯಮ 98ರನ್ವಯ ಜೀವನಾಧಾರ ಭತ್ಯೆ ಪಾವತಿಸಲಾಗುವುದು. ನೌಕರರು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಸಿಇಒ ಸೂಚಿಸಿದ್ದಾರೆ.