- ‘ಪಕ್ಷ, ವರಿಷ್ಠರು ಹೇಳಿದಾಗ ಸ್ಪರ್ಧಿಸಿದ್ದೇನೆ‘
- ‘ಕುಟುಂಬಕ್ಕೆ ಚ್ಯುತಿ ತರುವ ಕೆಲಸ ಮಾಡಿಲ್ಲ‘
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.
ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ವದಂತಿಗಳು ವ್ಯಾಪಕವಾಗುತ್ತಿದ್ದಂತೆಯೇ ಅವರು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
“ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧ ಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
“ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್ ಕಮಲದ ಉಪ ಚುನಾವಣೆಯಲ್ಲಿ ಜನತಾ ದಳ ಪಕ್ಷ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ” ಎಂದು ತಿಳಿಸಿದ್ದಾರೆ.
ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ.
“ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ” ಎಂದಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ: ಎಚ್ ಡಿ ಕುಮಾರಸ್ವಾಮಿ
“ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು” ಎಂದು ಮನವಿ ಮಾಡಿಕೊಂಡಿದ್ದಾರೆ.
“ಎಲ್ಲ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.