ಚುನಾವಣಾ ಸಮಯದಲ್ಲಿ ಪತ್ರಕರ್ತರು-ಮಾಧ್ಯಮಗಳ ಪಾತ್ರ; ಲಂಕೇಶರ ಒಲವು-ನಿಲುವು

Date:

Advertisements
ಎಲೆಕ್ಷನ್‌ಗೆ ನಿಂತಿರೋರೆಲ್ರೂ ಕಳ್ಳರು, ಸುಳ್ಳರು ಅಂತ ಬರದ್ರೆ ಅದು ನಮ್ಮ ಓದುಗರಿಗೆ ದಾರಿ ತಪ್ಪಿಸಿ, ಮೋಸ ಮಾಡಿದ ಹಾಗೆ ಆಗುತ್ತದೆ. ಇದು ಡೆಮಾಕ್ರಸಿ, ಮತದಾರರು ಯಾರ್‍ನಾದ್ರು ಒಬ್ಬನನ್ನು ಆರಿಸಲೇಬೇಕು. ಸ್ಪರ್ಧೆ ಮಾಡಿರುವವರಲ್ಲಿ ಯಾರು ಕಡಿಮೆ ಕಳ್ಳ ಅಂತ ನೋಡಿ ಅವನನ್ನು ಬೆಂಬಲಿಸಬೇಕು, ಇವನು ಇದ್ದುದರಲ್ಲಿ ಯೋಗ್ಯ ಅಂತ ಹೇಳಬೇಕು.

ಜನಸಾಮಾನ್ಯರು ಸುದ್ದಿ ಮಾಧ್ಯಮಗಳ ಬಗ್ಗೆ ಇಟ್ಟಿರುವ ನಂಬಿಕೆ ಪರಂಪರಾಗತವಾದುದು. ಅದು ಅಷ್ಟು ಸುಲಭವಾಗಿ ಸಡಿಲವಾಗುವಂಥದ್ದಲ್ಲ. ಆ ಕಾರಣಕ್ಕಾಗಿಯೇ ಸುದ್ದಿ ಮಾಧ್ಯಮಗಳು ಉಳಿದಿರುವುದು ಮತ್ತು ಆ ಕ್ಷೇತ್ರ ಇನ್ನೂ ಹೆಚ್ಚೆಚ್ಚು ವಿಸ್ತಾರಗೊಳ್ಳುತ್ತಿರುವುದು. ಜನಸಾಮಾನ್ಯರು ಸುದ್ದಿ ಮಾಧ್ಯಮಗಳ ಮೇಲೆ ಇಟ್ಟಿರುವ ಆ ನಂಬಿಕೆ ಇವತ್ತಿನ ಚಾಟ್ ಜಿಪಿಟಿ ಯುಗದಲ್ಲೂ ಹಾಗೇ ಇದೆ. ಆದರೆ ಸುದ್ದಿ ಮಾಧ್ಯಮಗಳು ಜನಸಾಮಾನ್ಯರ ನಂಬಿಕೆಗೆ ಬದ್ಧವಾಗಿವೆಯೇ?

ಈ ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ. ಅದಕ್ಕೆ ಕಾರಣ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರ ನೈತಿಕತೆ, ಪ್ರಾಮಾಣಿಕತೆ ಮರೆಯಾಗುತ್ತಿರುವುದು; ಮೌಲ್ಯಾಧಾರಿತ ಪತ್ರಿಕೋದ್ಯಮ ಪಕ್ಕಕ್ಕೆ ಸರಿಯುತ್ತಿರುವುದು. ಹೊಸ ತಲೆಮಾರಿನ ಬಹುಪಾಲು ಪತ್ರಕರ್ತರು ‘ಹೌ ಟು ಸೆಲ್ ಮೈ ರೈಟಿಂಗ್‘ ಎಂಬ ಗ್ಲೋಬಲ್ ತತ್ವಕ್ಕೆ ಕಟ್ಟುಬಿದ್ದವರು. ಪತ್ರಿಕೋದ್ಯಮವನ್ನು ಮಾರುಕಟ್ಟೆಯ ಸರಕಿನ ಮಟ್ಟಕ್ಕಿಳಿಸಿದವರು. ಇಲ್ಲಿ ನೈತಿಕತೆ, ಬದ್ಧತೆಗಿಂತ ಮುಖ್ಯವಾಗಿ ಲಾಭಕೋರ ಮನಸ್ಸು ವಿಜೃಂಭಿಸುತ್ತಿದೆ. ಸ್ವಾರ್ಥಕ್ಕೆ ಮೌಲ್ಯ ಮಾರಾಟವಾಗುತ್ತಿದೆ.

ಹಾಗಾಗಿ ಮಾಧ್ಯಮಗಳೂ ಬದಲಾಗಿವೆ, ಜನರೂ ಬದಲಾಗುತ್ತಿದ್ದಾರೆ. ಬದಲಾದ ಸಂದರ್ಭಕ್ಕನುಗುಣವಾಗಿ ಜನ ಇಂದು ಸುದ್ದಿಮಾಧ್ಯಮಗಳನ್ನು ನಂಬುತ್ತಿಲ್ಲ; ನಂಬುವಂತಹ ಸುದ್ದಿಗಳನ್ನು ಅವರೂ ಕೊಡುತ್ತಿಲ್ಲ. ಆದರೂ ಜನ ಪೇಪರ್‌ಗಳನ್ನು ಓದುತ್ತಾರೆ, ಸುದ್ದಿವಾಹಿನಿಗಳನ್ನು ನೋಡುತ್ತಾರೆ. ಅಷ್ಟೇ ಬೇಗ ಮರೆಯುತ್ತಾರೆ. ಜನರ ಮರೆಯುವ ಗುಣ, ಕುಲಗೆಟ್ಟಿರುವ ವ್ಯವಸ್ಥೆ ಮತ್ತು ಇವತ್ತಿನ ಸುದ್ದಿ ಇವತ್ತಿಗೇ ಸಾಯುತ್ತಿರುವ ಸಂದರ್ಭ ಮಾಧ್ಯಮದ ಮಂದಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿಕೊಟ್ಟಿದೆ. ಪತ್ರಕರ್ತರು ಯಾರ ಬಗ್ಗೆ ಏನನ್ನು ಬೇಕಾದರೂ ಬರೆಯಬಲ್ಲ ‘ಬುದ್ಧಿವಂತ’ರಾಗಿದ್ದಾರೆ. ಪತ್ರಿಕೋದ್ಯಮ ದಂಧೆಯಾಗಿದೆ. ಮಾರುಕಟ್ಟೆಯಲ್ಲಿ ಪತ್ರಿಕೆಯೂ ಬಿಕರಿಯಾಗುತ್ತಿದೆ, ಪತ್ರಕರ್ತನೂ ಬಿಕರಿಯಾಗುತ್ತಿದ್ದಾನೆ.

Advertisements

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಉಪ್ಪಿಗಿಲ್ಲದ ಸೊಪ್ಪಿಗಿಲ್ಲದ ಮೋದಿಯವರ ಮನದ ಮಾತು

ಇದು, ಚುನಾವಣೆಯ ಸಂದರ್ಭದಲ್ಲಿ ಇನ್ನಷ್ಟು ನಿಚ್ಚಳವಾಗಿ ಕಾಣುತ್ತಿದೆ. ಅದೇಕೋ ಇದೇ ಸಂದರ್ಭದಲ್ಲಿ ಎಲೆಕ್ಷನ್ ಎಂದಾಕ್ಷಣ ಅಲರ್ಟ್ ಆಗುತ್ತಿದ್ದ ಲಂಕೇಶರೂ ನೆನಪಾಗುತ್ತಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿ ಲಂಕೇಶರು ಈ ದೇಶದ ಆಗುಹೋಗುಗಳನ್ನು ನಿರ್ಧರಿಸುವ ಮಹತ್ತರ ಹೊಣೆಗಾರಿಕೆ ತಮ್ಮ ಭುಜದ ಮೇಲೆ ಬಿದ್ದಿದೆಯೇನೋ ಎನ್ನುವಂತೆ ಭ್ರಮಿಸುತ್ತಿದ್ದರು. ತಮ್ಮ ಚಿಲ್ಲರೆ ಚಟುವಟಿಕೆಗಳನ್ನು ಪಕ್ಕಕ್ಕಿಟ್ಟು ಯುದ್ಧಕ್ಕೆ ಸಜ್ಜಾಗಿ ನಿಂತ ಯೋಧನಂತೆ ಚಡಪಡಿಸುತ್ತಿದ್ದರು. ತಮ್ಮ ಸುತ್ತ, ಬಳಸಿ ಬಿಸಾಕಿದ ಬ್ಯಾಟರಿಯಂತೆ ಬಿದ್ದಿರುತ್ತಿದ್ದ ವರದಿಗಾರರ ಬುಡಕ್ಕೆ ಬಿಸಿ ತಾಗಿಸಿ ಚಾರ್ಜ್ ಮಾಡುತ್ತಿದ್ದರು. ನೂರು ಕ್ಯಾಂಡಲ್ ಬಲ್ಬ್ ಥರ ಟ್ವೆಂಟಿಫೋರ್ ಅವರ್ಸು ಉರಿಯುತ್ತಿರಬೇಕು… ಹಾಗೆ ಮಾಡುತ್ತಿದ್ದರು.

ಜನರ ಧ್ವನಿಯಾದ, ಜನರನ್ನು ಜಾಗೃತರನ್ನಾಗಿಸಿದ, ಜನಾಭಿಪ್ರಾಯವನ್ನು ರೂಪಿಸಿದ, ಸರ್ಕಾರಗಳನ್ನು ಬದಲಿಸಿದ ಕೀರ್ತಿ ಲಂಕೇಶರ ಪತ್ರಿಕೆಗೆ ಸಲ್ಲಲೇಬೇಕು. ಕೀರ್ತಿಶನಿ ಲಂಕೇಶರ ಹೆಗಲೇರಿದ್ದು, ಇಳಿದಿದ್ದು- ಎಲ್ಲಾ ಓದುಗರಿಂದಲೇ. ಲಂಕೇಶರ ಶಕ್ತಿ ಓದುಗರೇ. ಅವರು ಹೆದರುತ್ತಿದ್ದುದೂ ಓದುಗರಿಗೇ. ಯಾಕೆಂದರೆ ಪತ್ರಿಕೆಯ ಪ್ರಸಾರದಲ್ಲಿ ಅತಿವೃಷ್ಟಿ-ಅನಾವೃಷ್ಟಿ ಎರಡನ್ನೂ ಕಂಡಿದ್ದರು. ಅವೆರಡೂ ಲಂಕೇಶರಿಗೆ ಪಾಠ ಕಲಿಸಿದ್ದವು.

ಚುನಾವಣಾ ಸಮಯದಲ್ಲಿ ಲಂಕೇಶರಿಗೆ ಹೊಸ ಹುರುಪು ಮೈ ಮನಗಳನ್ನು ಆವರಿಸಿಕೊಳ್ಳುತ್ತಿತ್ತು. ಅದಕ್ಕೆ ಕಾರಣ, ಜವಾಬ್ದಾರಿ ಜಾಸ್ತಿಯಾಗುತ್ತಿದ್ದುದು ಮತ್ತು ಪತ್ರಿಕೆಯ ಸರ್ಕ್ಯುಲೇಷನ್ ಹೆಚ್ಚಾಗುತ್ತಿದ್ದುದು. ಆ ಸಂದರ್ಭದಲ್ಲಿ ಪತ್ರಿಕೆಯ ಕಚೇರಿ ಸಾಹಿತಿಗಳು, ಕಲಾವಿದರು ಮತ್ತು ವರದಿಗಾರರಿಂದ ಗಿಜಿಗುಡುತ್ತಿತ್ತು. ಪ್ರತಿದಿನ ‘ಕೂತು ಮಾತನಾಡುವ’ ಸೆಷನ್‌ಗಳು ಇದ್ದೇ ಇರುತ್ತಿದ್ದವು. ಆರಂಭದಲ್ಲಿ ಬೌದ್ಧಿಕ ಕಸರತ್ತಿನ ತರ್ಕಬದ್ಧ ಚರ್ಚೆ, ಮತ್ತೇರುತ್ತಿದ್ದಂತೆ ಅಭ್ಯರ್ಥಿಗಳನ್ನು ಅಮಲಿನಲ್ಲಿಯೇ ಸೋಲಿಸುವ-ಗೆಲ್ಲಿಸುವ ಹುಂಬತನ, ಕೊನೆಗೆ ಚಿಲ್ಲರೆ ಜಗಳದಲ್ಲಿ ಪರ್ಯವಸಾನ. ಇದು ಮಾಮೂಲಾಗಿತ್ತು. ಆದರೆ ಈ ಜಗಳಗಳು ಕೂಡ ವರದಿಗಾರರ ವೃತ್ತಿ ಬದುಕಿಗೆ ಸಾಣೆಯಂತೆ ಸಹಕಾರಿಯಾಗುತ್ತಿದ್ದುದು ‘ಪತ್ರಿಕೆ’ಯ ವೈಶಿಷ್ಟ್ಯ.

ಚುನಾವಣಾ ಕಾಲದಲ್ಲಿ ಲಂಕೇಶರು ಬೆಂಗಳೂರಿನ ಮುಖ್ಯ ವರದಿಗಾರರ ಜೊತೆಗೆ ಜಿಲ್ಲಾ ವರದಿಗಾರರನ್ನು ಕರೆದು ಮೀಟಿಂಗ್ ಮಾಡುತ್ತಿದ್ದರು. ಆ ಜಿಲ್ಲೆಗಳ ರಾಜಕೀಯ ವಿದ್ಯಮಾನ, ಪಕ್ಷಗಳು, ಅಭ್ಯರ್ಥಿಗಳು, ಜಾತಿ ಲೆಕ್ಕಾಚಾರ ಎಲ್ಲವನ್ನೂ ಕೇಳಿ ತಿಳಿದುಕೊಳ್ಳುತ್ತಿದ್ದರು. ಆ ಮಾತುಕತೆಯಲ್ಲಿಯೇ ವರದಿಗಾರರು ತೆಗೆದುಕೊಳ್ಳಬೇಕಾದ ಪರ-ವಿರೋಧದ ನಿಲುವು ಸ್ಪಷ್ಟವಾಗುತ್ತಿತ್ತು.

ಈ ಪರ-ವಿರೋಧ ಅಂದರೆ ಏನು? ಲಂಕೇಶರು ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳ ಅಭ್ಯರ್ಥಿಗಳ ಪರ-ವಿರೋಧವಿದ್ದು, ಬಿಜೆಪಿಯನ್ನು ಉಗ್ರವಾಗಿ ಟೀಕಿಸುತ್ತಿದ್ದರು. ಅದನ್ನು ಅಧಿಕಾರದ ಹತ್ತಿರಕ್ಕೂ ತರಬಾರದೆಂಬುದು ಅವರ ನಿಲುವಾಗಿತ್ತು. ವರದಿಗಾರರ ವರದಿಗಳಲ್ಲಿ ಅದು ಪ್ರತಿಫಲಿಸುತ್ತಿತ್ತು.

ರಾಜಕಾರಣಿಗಳಲ್ಲಿ ಒಳ್ಳೆಯವರು-ಕೆಟ್ಟವರು ಅಂದರೆ ಯಾರು, ಅದನ್ನು ಅಳೆಯುವ ಮಾನದಂಡವಾದರೂ ಏನು ಎಂದು ವರದಿಗಾರರು ತಲೆಕೆಡಿಸಿಕೊಂಡರೆ, ಲಂಕೇಶರೇ ಮುಂದಾಗಿ, ‘ಎಲೆಕ್ಷನ್‌ಗೆ ನಿಂತಿರೋರೆಲ್ರೂ ಕಳ್ಳರು, ಸುಳ್ಳರು, ಹಾಗಂತ ಬರದ್ರೆ ನಾವ್ ಅನ್‌ಪಾಪುಲರ್ ಆಗ್ತಿವಿ, ಸಿನಿಕರ ಸಾಲಿಗೆ ಸೇರ್‍ತೀವಿ, ಅದು ನಮ್ಮ ಓದುಗರಿಗೆ ದಾರಿ ತಪ್ಪಿಸಿ, ಮೋಸ ಮಾಡಿದ ಹಾಗೆ ಆಗುತ್ತದೆ. ಇದು ಡೆಮಾಕ್ರಸಿ, ಮತದಾರರು ಯಾರ್‍ನಾದ್ರು ಒಬ್ಬನನ್ನು ಆರಿಸಲೇಬೇಕು. ಸ್ಪರ್ಧೆ ಮಾಡಿರುವವರಲ್ಲಿ ಯಾರು ಕಡಿಮೆ ಕಳ್ಳ ಅಂತ ನೋಡಿ ಅವನನ್ನು ಬೆಂಬಲಿಸಬೇಕು, ಇವನು ಇದ್ದುದರಲ್ಲಿ ಯೋಗ್ಯ ಅಂತ ಹೇಳಬೇಕು’ ಎನ್ನುತ್ತಿದ್ದರು.

ಹಾಗೆಯೇ ಚುನಾವಣಾ ಸಮೀಕ್ಷೆಗಳನ್ನು ಮಾಡುವಾಗ ವರದಿಗಾರ ಹೇಗಿರಬೇಕು ಎಂಬುದನ್ನೂ ಹೇಳುತ್ತಿದ್ದರು. ಕ್ಷೇತ್ರದ ಸರ್ವೇ ಮಾಡುವ ವರದಿಗಾರರಿಗೆ ಪ್ರಯಾಣ ಭತ್ಯೆ, ಜೊತೆಗೆ ಕುಡಿತದ ಭತ್ಯೆಯೂ ಇರುತ್ತಿತ್ತು. ಇತರ ಜಿಲ್ಲೆಗಳಿಗೆ ಕಾರು ಮಾಡಿ ಕಳುಹಿಸಿದಾಗಲೂ ಕುಡಿತಕ್ಕೆ ಎಕ್ಸ್‌ಟ್ರಾ ಎಂದು ಕೊಡುತ್ತಿದ್ದರು. ನಾವೇನಾದ್ರು ಪ್ರಶ್ನಾರ್ಥಕವಾಗಿ ಅವರ ಮುಖ ನೋಡಿದರೆ, ‘ನೀನ್ ಕುಡಿತಿಯ ಅಂತ ಗೊತ್ತು. ಈ ಎಲೆಕ್ಷನ್ ಟೈಮಲ್ಲಿ ನಿನ್ಗೆ ಕುಡಿಸಕ್ಕಂತನೆ ಜನ ಇರ್ತಾರೆ ಅಂತ್ಲೂ ಗೊತ್ತು, ನೀನು ಹೆಚ್ಗೆ ಅಂದ್ರೆ ಎಷ್ಟು ಕುಡೀಬಹುದು, ನೂರಿನ್ನೂರೂಪಾಯ್ದು, ಅದಕ್ಕೆ ನಿನ್ನ ರಿಪೋರ್ಟ್ ಮಾರ್‍ಕೊಂಡು, ನಮ್ ಓದುಗರಿಗೆ ಮೋಸ ಮಾಡದ್ ನನಗಿಷ್ಟಿವಿಲ್ಲ, ಓದುಗರು ಕೊಟ್ಟಿರೋ ದುಡ್ಡಲ್ಲಿ ಕುಡ್ದು ವಸ್ತುನಿಷ್ಠ ವರದಿ ಬರಿ…’ ಎನ್ನುತ್ತಿದ್ದರು.

ರೂಢಿಗತ ಸುದ್ದಿ ಮಾಧ್ಯಮಗಳಿಗೂ ಲಂಕೇಶರಿಗೂ ಇದ್ದ ಫರಕ್ಕು ಇಷ್ಟೆ.

Basavaraju Megalkeri
+ posts

ಲೇಖಕ, ಪತ್ರಕರ್ತ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಸವರಾಜು ಮೇಗಲಕೇರಿ
ಬಸವರಾಜು ಮೇಗಲಕೇರಿ
ಲೇಖಕ, ಪತ್ರಕರ್ತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ವಿರುದ್ಧ ತೊಡೆ ತಟ್ಟಿದ ಇಂಡಿಯಾ ಒಕ್ಕೂಟ: ಕೆಟ್ಟ ವ್ಯವಸ್ಥೆಯ ವಿರುದ್ಧ ಹೋರಾಟ

ಭಾರತದ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಒಂದು ನಿರ್ಣಾಯಕ ಘಟ್ಟವಾಗಿದೆ. ಇದು ಕೇವಲ ಒಂದು...

ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಆರೋಪಗಳಿಗೆ ಉತ್ತರ ಕೊಟ್ಟಿತೆ? ಉಳಿದಿರುವ ಪ್ರಶ್ನೆಗಳೇನು?

ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳು ಆಯೋಗದ ಈ ನಡೆಯನ್ನು "ಸಂವಿಧಾನಕ್ಕೆ ಅಪಮಾನ"...

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ...

Download Eedina App Android / iOS

X