“ಸೋನಿಯಾ ಗಾಂಧಿ ವಿಷ ಕನ್ಯೆ, ರಾಹುಲ್ ಗಾಂಧಿ ಹುಚ್ಚ” ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನಡೆಗೆ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಯತ್ನಾಳ ಹೇಳಿಕೆ ಖಂಡಿಸಿ, “ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಇಂತಹ ಹೇಳಿಕೆ ಬಿಜೆಪಿ ಸಂಸ್ಕೃತಿ ಅಲ್ಲ” ಎಂದಿದ್ದಾರೆ.
“ಯತ್ನಾಳ ಅವರು ಬೇರೆ ಪಕ್ಷಗಳ ನಾಯಕರ ಬಗ್ಗೆ ಇಂತಹ ಹೇಳಿಕೆ ನೀಡಬಾರದು” ಎಂದೂ ಶೋಭಾ ಕರಂದ್ಲಾಜೆ ಚಿಕ್ಕಮಗಳೂರಿನ ಕಳಸದಲ್ಲಿ ಶುಕ್ರವಾರ ಹೇಳಿದ್ದಾರೆ.
“ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ಕರ್ನಾಟಕದ ನಾಯಕರಲ್ಲ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು. ಅವರ ಮಾತನ್ನು ಚೀನಾ, ಪಾಕಿಸ್ತಾನ, ಅಮೆರಿಕಾ ದೇಶದ ಜನ ಕೇಳಿಸಿಕೊಳ್ತಾರೆ. ಮೋದಿ ಅವರಿಗೆ ಅವಮಾನ ಮಾಡುವುದನ್ನು ಯಾರೂ ಕ್ಷಮಿಸಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಬೇಷರತ್ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ‘ವಿಷ ಸರ್ಪ’ ಹೇಳಿಕೆ ಕುರಿತಂತೆ ಬಿಜೆಪಿ ನಾಯಕರು ಸಾಲು ಸಾಲಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಿದ್ದಾರೆ.