- 2018ರ ಚುನಾವಣಾ ಅಕ್ರಮ ಆರೋಪ; ಶಾಸಕತ್ವ ಅಸಿಂಧುಗೊಳಿಸಿದ್ದ ಹೈಕೋರ್ಟ್
- ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಶಾಸಕ ಗೌರಿಶಂಕರ್
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ ಸಿ ಗೌರಿಶಂಕರ್ ಅವರು ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಡಿ ಸಿ ಗೌರಿಶಂಕರ್ ಅವರು ಮತದಾರರಿಗೆ ನಕಲಿ ಬಾಂಡ್ ವಿತರಿಸಿ ಮೋಸ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ ಡಿ ಸಿ ಗೌರಿಶಂಕರ್ ಅವರ ಶಾಸಕತ್ವವನ್ನು ಅಸಿಂಧು ಮಾಡಿ ಹೈಕೋರ್ಟ್ ಆದೇಶ ನೀಡಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಗೌರಿಶಂಕರ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಶಾಸಕರ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ರೀತಿಯ ಅಡ್ಡಿ ಇಲ್ಲ. ಸದ್ಯಕ್ಕೆ ಕೇಸನ್ನು ತಡೆಹಿಡಿಯಲಾಗಿದೆ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
ಚುನಾವಣೆ ಹೊಸ್ತಿಲಲ್ಲಿ ತುಮಕೂರು ಗ್ರಾಮಾಂತರ ಶಾಸಕ ಡಿ ಸಿ ಗೌರಿಶಂಕರ್ ಅವರ ಶಾಸಕತ್ವ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶದಿಂದ ಜೆಡಿಎಸ್ ಕಾರ್ಯಕರ್ತರು ಮತ್ತು ಮತದಾರರಲ್ಲಿ ಆತಂಕ ಉಂಟು ಮಾಡಿತ್ತು. ಸುಪ್ರೀಂಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ತುಮಕೂರಿನಲ್ಲಿ ಶಾಸಕ ಡಿ ಸಿ ಗೌರಿಶಂಕರ್ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.
ಪ್ರಕರಣದ ಹಿನ್ನೆಲೆ
2018ರ ಚುನಾವಣೆ ಸಂದರ್ಭ ಗೌರಿಶಂಕರ್ ಅವರು 32,000 ವಯಸ್ಕರು ಮತ್ತು 16,000 ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದರು. ಅವರು ವಿಮಾ ಪಾಲಿಸಿಯ ಆಮಿಷ ಒಡ್ಡಿ ಅಕ್ರಮವಾಗಿ ಚುನಾವಣೆ ಗೆದ್ದಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆರೋಪಿಸಿದ್ದರು. ಹಾಗಾಗಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಬೇಕೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಫೋಟೋ ಸುದ್ದಿ | ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿಗಳು
ಮತದಾರರಿಗೆ ಆಮಿಷವೊಡ್ಡಿ ಚುನಾವಣಾ ಅಕ್ರಮ ಎಸಗಿದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಅವರ ಶಾಸಕ ಸ್ಥಾನವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಶಾಸಕ ಗೌರಿ ಶಂಕರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದರು. ಈ ಬಗ್ಗೆ ಹೈಕೋರ್ಟ್ನಲ್ಲಿ ಮನವಿ ಮಾಡಿದ್ದರು. ಬಳಿಕ ಅವರ ಮನವಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ತನ್ನ ತೀರ್ಪನ್ನು 30 ದಿನಗಳ ಮಟ್ಟಿಗೆ ತಡೆ ಹಿಡಿದಿತ್ತು.
ಗೌರಿಶಂಕರ್ ಅವರ ಶಾಸಕತ್ವ ಅಸಿಂಧುಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿತ್ತು.
ಚುನಾವಣಾ ಅಕ್ರಮ ಆರೋಪದಲ್ಲಿ ಶಾಸಕ ಸ್ಥಾನ ಕಳೆದುಕೊಂಡವರು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ನಿಯಮವಿದೆ. ಅದರಂತೆ ಹೈಕೋರ್ಟ್ ತೀರ್ಪು ಜಾರಿಯಾಗಿದ್ದರೆ ಗೌರಿಶಂಕರ್ ಕೂಡ ವಿಧಾನಸಭಾ ಚುನಾವಣೆ ಮತ್ತು ಮುಂದಿನ ಆರು ವರ್ಷ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿರಲಿಲ್ಲ. ಆದರೆ ಈಗ ಆ ಆತಂಕ ದೂರವಾಗಿದೆ.