ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದಾರೆ.
ವಿಜಯಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸಿದ್ದಸಿರಿ ಸಂಸ್ಥೆಯ ಬ್ಯಾಂಕ್ ಮತ್ತು ಸಕ್ಕರೆ ಕಾರ್ಖಾನೆಗೆ ಯತ್ನಾಳ್ ಅಧ್ಯಕ್ಷರಾಗಿದ್ದಾರೆ. ಈ ಎರಡೂ ಸಂಸ್ಥೆಗಳ ಸಿಬ್ಬಂದಿ ಹೆಸರಿನಲ್ಲಿ ನಕಲಿ ಮತದಾನ ಮಾಡಿದ್ದಾರೆ ಎಂದು ಯತ್ನಾಳ್ ವಿರುದ್ಧ ಸ್ಪರ್ಧಿಸಿ ಸೋಲುಂಡ ಕಾಂಗ್ರೆಸ್ನ ಅಬ್ದುಲ್ ಹಮೀದ್ ಮುಶ್ರಫ್ ಆರೋಪಿಸಿದ್ದಾರೆ.
“ಯತ್ನಾಳ್ ಮಾಡಿರುವ ನಕಲಿ ಮತದಾನಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳೂ ಯತ್ನಾಳ್ ಜೊತೆ ಶಾಮೀಲಾಗಿರುವ ಶಂಕೆ ಇದೆ” ಎಂದು ಅವರು ಹೇಳಿದ್ದಾರೆ.
ಯತ್ನಾಳ್ಗೆ ನೋಟಿಸ್
ಚುನಾವಣಾ ಪ್ರಚಾರದ ವೇಳೆ ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರು. ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯತ್ನಾಳ್ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿತ್ತು.