- ಶೆಟ್ಟರ್ ಉಳಿಸಿಕೊಳ್ಳಲು ಪ್ರಯತ್ನಿಸಿದೆ, ಆದರೆ ನನ್ನ ಮಾತು ಅವರು ಕೇಳಲಿಲ್ಲ
- ಶೆಟ್ಟರ್ ಹೋದರೂ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ
ಶೆಟ್ಟರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಪ್ರಯತ್ನಿಸಿದೆ. ಆದರೂ ಅವರು ಬಿಜೆಪಿ ಬಿಟ್ಟು ಹೋದರು. ನಾವು ಇಲ್ಲಿ ಪಕ್ಷ ಬಲಪಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಶೆಟ್ಟರ್ ಇಲ್ಲದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷಕ್ಕಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಅಖಾಡಕ್ಕಿಳಿದಿರುವ ಜೋಶಿ, ಮಂಗಳವಾರ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿ ಮಾತನಾಡಿದರು.
“ಶೆಟ್ಟರ್ ಬಿಜೆಪಿ ಬಿಟ್ಟು ಹೋಗಬಾರದಿತ್ತು. ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರಕ್ಕೆ ಬನ್ನಿ ನಾನು ಹೈಕಮಾಂಡ್ ಜೊತೆ ಮಾತನಾಡ್ತೇನೆ ಎಂದು ಶೆಟ್ಟರ್ ಗೆ ಮನವಿ ಮಾಡಿದ್ದೆ. ಆದರೆ ಶೆಟ್ಟರ್ ನನ್ನ ಮಾತು ಕೇಳಲಿಲ್ಲ” ಎಂದರು.
“ಶೆಟ್ಟರ್ ಹೋದರೂ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ನಾವು ಪಕ್ಷ ಕಟ್ಟುವ ಕಾರ್ಯದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುತ್ತೇವೆ” ಎಂದು ಜೋಶಿ ತಿಳಿಸಿದರು.
“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಹುಬ್ಬಳ್ಳಿ ಧಾರವಾಡ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬಂದು ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಅರವಿಂದ ಬೆಲ್ಲದ್ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಮೃತ್ ದೇಸಾಯಿ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿದ ಜೋಶಿ ಬಿಜೆಪಿ ಅಭ್ಯರ್ಥಿಗಳಿಗೆ ನೈತಿಕ ಸ್ಥೈರ್ಯ ತುಂಬಿದರು. ಹುಬ್ಬಳ್ಳಿ ಧಾರವಾಡದಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಚಿಕ್ಕೋಡಿಗೆ ತೆರಳಿದ ಜೋಶಿ, ನಿಖಿಲ್ ಕತ್ತಿ ಅವರ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾದರು.