ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಟನನ್ನು ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ಯಲಾಗಿದೆ. ಡಿ. 4ರಂದು ಪುಷ್ಪಾ 2 ಬಿಡುಗಡೆಯಾಗುವ ಸಂದರ್ಭ ಸಂಧ್ಯಾ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾಗಿದ್ದು ಮಹಿಳೆ ಮೃತಪಟ್ಟಿದ್ದರು. ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಪುಷ್ಪಾ-2’ ವೀಕ್ಷಣೆ ವೇಳೆ ಮಹಿಳೆ ಸಾವು; ಕುಟುಂಬಕ್ಕೆ ನೆರವು ನೀಡುತ್ತೇವೆಂದ ಅಲ್ಲು ಅರ್ಜುನ್
ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸಂಧ್ಯಾ ಚಿತ್ರಮಂದಿರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಯ ಬಗ್ಗೆ ಅಲ್ಲು ಅರ್ಜುನ್ ಈಗಾಗಲೇ ಪ್ರತಿಕ್ರಿಯಿಸಿದ್ದರು.
ಮೃತರ ಕುಟುಂಬಕ್ಕೆ ಎಲ್ಲ ರೀತಿಯಿಂದಲೂ ನೆರವು ನೀಡುವುದಾಗಿ ನಟ ಭರವಸೆ ನೀಡಿದ್ದರು.
ನನ್ನ ಪರವಾಗಿ ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂ. ಅಲ್ಲದೆ, ನಮ್ಮ ತಂಡದಿಂದ ಯಾವುದೇ ಸಹಾಯವನ್ನು ನೀಡಲು ನಾವು ಸಿದ್ಧರಿದ್ದೇವೆ. ಅವರಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ ಎಂದು ಅಲ್ಲು ಅರ್ಜುನ್ ತಿಳಿಸಿದ್ದರು.
