- 12 ತಾಸಿನ ಕರ್ತವ್ಯಕ್ಕೆ ನಿಯೋಜನೆ; ಗೌರವಧನ ಬಿಡಿಗಾಸು ಇಲ್ಲ
- ಮನವಿ ಪತ್ರಕ್ಕೆ ಸ್ಪಂದನೆ; ಗೌರವಧನ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಕೋವಿಡ್ ಸಮಯದಲ್ಲಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದಾಗಲೂ ಗೌರವ ಧನ ನೀಡಲಿಲ್ಲ, ಚುನಾವಣೆ ಕೆಲಸಕ್ಕೆ ನಿಯೋಜಿಸಿ, ಅದಕ್ಕೆ ತಕ್ಕ ಭತ್ಯೆ ನೀಡುತ್ತಿಲ್ಲ. ಹೋರಾಡಿಯೇ ಎಲ್ಲ ಸೌಲಭ್ಯ ಪಡೆಯಬೇಕು ಎಂದು ಕರ್ನಾಟಕ ಚುನಾವಣ ಆಯೋಗದ ವಿರುದ್ಧಆಶಾ ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಚುನಾವಣೆಗೆ ರಾಜ್ಯದಲ್ಲಿ 42 ಸಾವಿರ ಆಶಾ ಕಾರ್ಯಕರ್ತೆಯರನ್ನು ಮತದಾನ ಕೇಂದ್ರಗಳಲ್ಲಿ ಆರೋಗ್ಯ ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿದೆ. ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಮತಗಟ್ಟೆ ಇಲ್ಲದಿದ್ದರೆ ಸಮೀಪದ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವಂತೆಯೂ ಆದೇಶಿಸಲಾಗಿದೆ.
ಮೇ.10ರಂದು ನಡೆಯುತ್ತಿರುವ ವಿಧಾನಸಭೆ ಚುನಾವಣೆ ಪ್ರಯುಕ್ತ ಎಲ್ಲ ಇಲಾಖೆಗಳ ನೌಕರರು, ಶಿಕ್ಷಕರು, ಶುಶ್ರೂಷಕರು ಸೇರಿದಂತೆ ಸಿಬ್ಬಂದಿಯನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿ, ಗೌರವಧನ ನಿಗದಿಪಡಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರಿಗೆ ಮಾತ್ರ ಗೌರವ ಧನ ನೀಡಲಾಗಿಲ್ಲ ಎಂಬುದು ಆಕ್ಷೇಪಕ್ಕೆ ಕಾರಣವಾಗಿದೆ.
ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ, ಅನಾರೋಗ್ಯ ಸಮಸ್ಯೆ ಇರುವವರಿಗೆ, ಮತದಾನಕ್ಕೆ ಬಂದ ಅಸ್ವಸ್ಥ ಮತದಾನರಿಗೆ ಓಆರ್ಎಸ್ ವಿತರಣೆ ಸೇರಿದಂತೆ ಹಲವು ಜವಾಬ್ದಾರಿಯನ್ನು ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ವಹಿಸಿದ್ದಾರೆ.
ಚುನಾವಣೆ ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಗೌರವಧನ ನೀಡಲು ಸಂಬಂಧಿಸಿದಂತೆ ಆಯೋಗ ಪಟ್ಟಿ ಮಾಡಿದೆ. ಈ ಪಟ್ಟಿಯಲ್ಲಿ ಆಶಾ ಕಾರ್ಯಕರ್ತೆಯರನ್ನು ಚುನಾವಣಾ ಆಯೋಗ ಕಡೆಗಣಿಸಿದೆ. ನಂತರ ಆಶಾ ಕಾರ್ಯಕರ್ತೆಯರು ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಗೆ ಪತ್ರವನ್ನೂ ಬರೆದಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲ್ಲುತ್ತಾರೆ: ಬಿಜೆಪಿ ಸಂಸದೆ
ಆಶಾ ಕಾರ್ಯಕರ್ತೆಯರನ್ನು ಅವರ ಕಾರ್ಯಕ್ಷೇತ್ರ ಹೊರತುಪಡಿಸಿ ಬೇರೆ ಕ್ಷೇತ್ರಗಳಿಗೆ ನಿಯೋಜಿಸಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈ ಹಿಂದೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಈಗ ಬೇರೆ ಕ್ಷೇತ್ರಗಳಿಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಯಾವುದಾದರೂ ಆರೋಗ್ಯ ಸಂಬಂಧಿ ಚಟುವಟಿಕೆಗೆ ಆಯೋಜಿಸಿ ಆ ಕರ್ತವ್ಯಕ್ಕೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿಕೊಂಡರೆ ದಿನಭತ್ಯೆ ಮತ್ತು ಸಾರಿಗೆ ವೆಚ್ಚ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಈಗ ಚುನಾವಣೆ ಕರ್ತವ್ಯ ಪೂರೈಸುತ್ತಿದ್ದೇವೆ. ಆದರೆ, ಅದಕ್ಕೆ ತಕ್ಕ ಪ್ರತಿಫಲವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ , ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಯರಿಗೆ ₹700 ನೀಡಲಾಗುತ್ತಿತ್ತು. ಆದರೆ, ಈ ಬಾರಿ, ಯಾವುದೇ ಗೌರವಧನ ನೀಡುತ್ತಿಲ್ಲ ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಹನುಮೇಶ ಜಿ ಹೇಳಿದ್ದಾರೆ.
ಮುಖ್ಯ ಚುನಾವಣಾಧಿಕಾರಿ ಭರವಸೆ
ಆಶಾ ಕಾರ್ಯಕರ್ತೆಯರಿಂದ ಪತ್ರ ಪಡೆದ ನಂತರ ಪ್ರತಿಕ್ರಿಯೆ ನೀಡಿರುವ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಗೌರವಧನ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇವೆ. ನಿಯಮದ ಪ್ರಕಾರ ಅವರಿಗೆ ಸಂದಾಯವಾಗಲಿದೆ ಎಂದು ಭರವಸೆ ನೀಡಿದ್ದಾರೆ.