ಸ್ಯಾಂಡಲ್ವುಡ್ ನಟರಾದ ವಿಜಯ ರಾಘವೇಂದ್ರ ಹಾಗೂ ಶ್ರೀ ಮುರಳಿ ತಾಯಿ, ಹಿರಿಯ ನಿರ್ಮಾಪಕ ಚಿನ್ನೇಗೌಡ ಅವರ ಪತ್ನಿ ಜಯಮ್ಮ ಇಂದು (ಜೂ.16) ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್ವುಡ್ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಪತಿ, ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಚಿನ್ನೇಗೌಡರು ಸ್ಯಾಂಡಲ್ವುಡ್ನ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಳ್ಳಲು ಹಾಗೂ ಇಬ್ಬರು ಗಂಡುಮಕ್ಕಳು ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಬೆಳೆಯಲು ಜಯಮ್ಮ ಅವರ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ನೈತಿಕ ಬೆಂಬಲ ಅಪಾರವಾಗಿತ್ತು. ಜಯಮ್ಮ ಅವರು ʼಸೇವಂತಿ ಸೇವಂತಿ’ ಸಿನಿಮಾ ನಿರ್ಮಿಸಿ, ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದರು.
2023ರಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದೀಗ ಅವರ ತಾಯಿ ಜಯಮ್ಮ ಅವರ ಸಾವು ಕುಟುಂಬಕ್ಕೆ ಅಪಾರ ನೋವುಂಟು ಮಾಡಿದೆ.




