ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು. ದಮನಿತರಿಗೆ ಮಾತ್ರವಲ್ಲದೆ ಎಲ್ಲ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಶನಿವಾರ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 118 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
“ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದರು.
ಕೊಡಗು ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕ್ರಮ
ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.
ಬಿಜೆಪಿಯವರು ಹತಾಶರಾಗಿದ್ದಾರೆ
“ಬಿಜೆಪಿಯ ಬೇಡಿಕೆಗೆಲ್ಲಾ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯವರು ಹತಾಶರಾಗಿದ್ದು, ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ ಅಭ್ಯಾಸ. ಅವರು ಹೇಳಿದ್ದಕ್ಕೆಲ್ಲಾ ಪ್ರತಿಕ್ರಿಯೆ ನೀಡಲಾಗದು” ಎಂದರು