ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವವನ್ನು ಬೆಳಗಾವಿಯಲ್ಲಿ ಸರ್ಕಾರದಿಂದ ಆಚರಿಸಲಾಗುತ್ತಿದೆ. ಕಾಂಗ್ರೆಸ್ ಅಧಿವೇಶನದ ನೂರು ವರ್ಷಗಳ ಸ್ಮರಣಾರ್ಥವಾಗಿ ಸುವರ್ಣ ವಿಧಾನಸೌಧ ಮುಂಭಾಗ ಮಹಾತ್ಮ ಗಾಂಧಿಯ ಪುತ್ಥಳಿಯ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದ್ದಾರೆ.
ಗಾಂಧಿ ಅವರ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಪ್ರತಿಮೆಯ ನಿರ್ಮಾಣಕ್ಕೆ ಸುಮಾರು 20 ಟನ್ ಕಂಚನ್ನು ಬಳಸಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ” ಎಂದು ಹೇಳಿದರು.
“ಗಾಂಧಿಯವರು ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ” ಎಂದರು.
“ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ‘ಜೈ ಭಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ’ ಮುನ್ನಡೆಸುತ್ತೇವೆ” ಎಂದು ಹೇಳಿದರು.
ಪ್ರತಿಮೆ ಅನಾವರಣದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಎಚ್.ಕೆ. ಪಾಟೀಲ, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿ ಮತ್ತಿತರರು ಇದ್ದರು.