ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
“ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು” ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ ಅವರು ದಾವಣಗೆರೆಯಲ್ಲಿ ಇಂದು ಸಿಎಂ ಅಧಿಕಾರ ಕುರಿತು ಹೇಳಿಕೆ ನೀಡಿದರು. “ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ, ಅದರಲ್ಲೂ ಡಿಸೆಂಬರ್ ನೊಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ” ಎಂದಿದ್ದರು.
