ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎಂದಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವರು, SIT ರಚಿಸಿದ್ದು ತಾವೇ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.
“SIT ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ SIT ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ? ಧರ್ಮಸ್ಥಳದ 13 ಉತ್ಖನನ ಮಾಡಿದ ಜಾಗಗಳಲ್ಲಿ ಈವರೆಗೂ ಮಣ್ಣು ಅಗೆದಿದ್ದೊಂದೇ ಬಂತು. ಅನಾಮಿಕ ಆರೋಪಿಸಿದಂತೆ ಏನೊಂದೂ ಗುರುತರ ಸಾಕ್ಷಿ, ಶವಗಳ ಅವಶೇಷ ಸಿಗದಾಯಿತು. ಹೀಗಾಗಿ ಸಿಎಂ ಈಗ ತಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂಬ ಕಾರಣಕ್ಕೆ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.
“ಧರ್ಮಸ್ಥಳಕ್ಕೆ ತಲೆಮಾರಿನ ಇತಿಹಾಸವಿದೆ. ಈ ಪವಿತ್ರ ಕ್ಷೇತ್ರಕ್ಕೆ ಪ್ರತಿ ದಿನ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಆದರೆ ರಾಜ್ಯ ಸರ್ಕಾರ ಜನರ ನಂಬಿಕೆ ವಿಚಾರದಲ್ಲಿ ಆಟವಾಡುತ್ತಿದೆ. ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ತೀವ್ರ ಖಂಡನೀಯ” ಎಂದಿದ್ದಾರೆ.