ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವ ಸುಳಿವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದಾರೆ.
ವಿಧಾನಸೌಧದ ಮುಂಭಾಗ ಐರಾವತ ಕ್ಲಬ್ಕ್ಲಾಸ್–2.0 ನೂತನ ಬಸ್ಗಳನ್ನು ಸಾರ್ವಜನಿಕ ಸೇವೆಗೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ‘ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಎಂದು ಹಲವು ಮಹಿಳೆಯರು ಸಾಮಾಜಿಕ ಜಾಲತಾಣ ‘ಎಕ್ಸ್ ಹಾಗೂ ಇ–ಮೇಲ್ ಮೂಲಕ ಮನವಿ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.
‘ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವಾಗ ನಾವು ಹಣ ಕೊಡಲು ಮುಂದಾದರೂ ನಿರ್ವಾಹಕರು ನಿರಾಕರಿಸುತ್ತಾರೆ; ಆರ್ಥಿಕವಾಗಿ ಅನುಕೂಲ ಸ್ಥಿತಿಯಲ್ಲಿ ಇರುವ ಕಾರಣ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದ್ದು, ನಮಗೆ ಉಚಿತ ಪ್ರಯಾಣ ಬೇಡವೆಂದು ಶೇ 5ರಿಂದ 10ರಷ್ಟು ಮಹಿಳೆಯರು ಹೇಳುತ್ತಿದ್ದಾರೆ. ಈ ಕುರಿತು ಪ್ರತ್ಯೇಕ ಸಭೆ ಕರೆದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಜತೆ ಚರ್ಚಿಸಲಾಗುವುದು’ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?
‘ಕೆಎಸ್ಆರ್ಟಿಸಿ ಆರಂಭವಾದಾಗ ಕೇವಲ 120 ಬಸ್ಗಳು ಇದ್ದವು, ಇಂದು 24,282 ಬಸ್ಗಳು ಇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6,200 ಬಸ್ ಖರೀದಿಗೆ ಸಮ್ಮತಿ ನೀಡಿದೆ. ಅವುಗಳಲ್ಲಿ 3,400 ಬಸ್ಗಳನ್ನು ಖರೀದಿಸಲಾಗಿದೆ. 1.80 ಕೋಟಿ ಜನರು ಪ್ರಯಾಣಿಸುತ್ತಿದ್ದಾರೆ. ಸುಮಾರು ಒಂಬತ್ತು ಸಾವಿರ ಚಾಲಕರು ಹಾಗೂ ನಿರ್ವಾಹಕರ ನೇಮಕಾತಿಗೂ ಚಾಲನೆ ನೀಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಹೇಳಿದರು.
‘ಶಾಸಕನಾಗಿದ್ದ ಆರಂಭದಲ್ಲಿ ಎರಡು ಮೂರು ಬಾರಿ ಐರಾವತ ಬಸ್ನಲ್ಲಿ ಪ್ರಯಾಣ ಮಾಡಿದ್ದೆ. ಚುನಾವಣಾ ಸಮಯದಲ್ಲಿ ಪ್ರಚಾರಕ್ಕಾಗಿ ಐರಾವತ ಬಸ್ಗಳನ್ನು ಬಳಸಲಾಗುತ್ತಿತ್ತು. ಅವಕಾಶ ಸಿಕ್ಕಾಗ ಮತ್ತೆ ಪ್ರಯಾಣ ಮಾಡುವೆ’ ಎಂದರು.
