ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಲ್ಲಿ ಕೊನೆ ಕ್ಷಣದಲ್ಲಿ ಬದಲಾವಣೆ ನಡೆದಿದೆ. ಸೋಮವಾರ ಬೆಳಗ್ಗೆ ಪ್ರಕಟವಾದ ಪಟ್ಟಿಯಲ್ಲಿ ಮಂಕಾಳ್ ವೈದ್ಯ ಅವರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆದರೆ, ಇದೀಗ, ಅವರನ್ನು ಪಟ್ಟಿಯಿಂದ ತೆಗೆದು, ಎಸ್.ಎಸ್. ಮಲ್ಲಿಕಾರ್ಜುನ ಅವರ ಹೆಸರನ್ನು ಪಟ್ಟಿಗೆ ಸೇರಿಸಲಾಗಿದೆ.
ಎಸ್.ಎಸ್. ಮಲ್ಲಿಕಾರ್ಜುನ ಅವರು ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದು, ದಾವಣಗೆರೆ ಜಿಲ್ಲೆಯ ಪ್ರಭಾವಿ ಮುಖಗಳಲ್ಲಿ ಒಬ್ಬರು. ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಅದಕ್ಕಾಗಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರವನ್ನು ಪ್ರತಿನಿಧಿಸುವ ಮಂಕಾಳ್ ವೈದ್ಯ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಆದಾಗ್ಯೂ, ಪಟ್ಟಿಯಲ್ಲಿ ಈ ಬದಲಾವಣೆ ಯಾವ ಹಂತದಲ್ಲಿ, ಯಾವ ಕಾರಣಕ್ಕಾಗಿ ನಡೆದಿದೆ ಎಂಬುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಿದ್ದಿಲ್ಲ. ಹೀಗಾಗಿ, ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ನಡೆದ ಈ ಬದಲಾವಣೆಯ ಹಿಂದಿನ ರಾಜಕೀಯ ಲೆಕ್ಕಾಚಾರವೇನು ಎಂಬುದರ ಕುರಿತು ಊಹಾಪೋಹಗಳು ಹರಿದಾಡುತ್ತಿವೆ.
ಪಟ್ಟಿಯಲ್ಲಿ 20 ಮಂದಿಯನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗಳೊಸಲು ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಪಕ್ಷದ ಆಂತರಿಕ ಒತ್ತಡ ಹಾಗೂ ರಾಜಕೀಯ ಪ್ರತಿನಿಧಿತ್ವದ ಲೆಕ್ಕಾಚಾರಗಳು ಅಂತಿಮ ಕ್ಷಣದವರೆಗೂ ಮುಂದುವರಿದಿದ್ದು, ಕೊನೆ ಕ್ಷಣದಲ್ಲಿಯೂ ಬದಲಾವಣೆ ನಡೆದಿದೆ.



