ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ ಐದು ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿ. ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಶನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿ ಸೇರಿ ಒಟ್ಟು 5 ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿವೆ ಎಂದು ಮಾಹಿತಿ ಬಂದಿದೆ. ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.
