ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೇ, ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತು ವಿಧಿಸಿ ಸಮೀಕ್ಷೆ ಮುಂದುವರಿಸಲು ಅವಕಾಶ ನೀಡಿದೆ. ಈ ಬಗ್ಗೆ ಮಧ್ಯಂತರ ಆದೇಶ ನೀಡಿದೆ.
ಇದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ರಾಜ್ಯ ಸರ್ಕಾರಕ್ಕೆ ಸಿಕ್ಕ ರೀಲೀಫ್ ಆಗಿದೆ. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ವಾದಮಂಡಿಸಿದ್ದರು. ಹೈಕೋರ್ಟ್ ಸಿಜೆ ವಿಭು ಭಕ್ರು ಅವರ ಪೀಠದಲ್ಲಿ ಕಳೆದ ಮೂರು ದಿನದಿಂದ ವಾದ-ಪ್ರತಿವಾದ ನಡೆದಿತ್ತು.
ಅಂತಿಮವಾಗಿ ಈಗ ಹೈಕೋರ್ಟ್ ಸಮೀಕ್ಷೆಯನ್ನು ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ರಾಜ್ಯ ಒಕ್ಕಲಿಗರ ಸಂಘ, ಬ್ರಾಹ್ಮಣ ಮಹಾಸಭಾ ಸೇರಿದಂತೆ ಕೆಲವು ಸಂಘಟನೆಗಳು ಹೈಕೋರ್ಟ್ ಗೆ ಮನವಿ ಮಾಡಿದ್ದವು. ಆದರೇ, ಹೈಕೋರ್ಟ್ ಈಗ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಹೀಗಾಗಿ ಸಮೀಕ್ಷೆ ಮುಂದುವರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ
ದೀರ್ಘಕಾಲ ವಾದ, ಪ್ರತಿವಾದ ಆಲಿಸಿದ ಕೋರ್ಟ್, ಪೀಠ – ಮೇಲಿನದನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ಸಮೀಕ್ಷೆಯನ್ನು ನಾವು ನಿಷೇಧಿಸಲು ಸಾಧ್ಯವಿಲ್ಲ. ಆದಾಗ್ಯೂ ಸಂಗ್ರಹಿಸಿದ ದತ್ತಾಂಶವನ್ನು ಯಾವುದೇ ವ್ಯಕ್ತಿ ಬಹಿರಂಗಪಡಿಸಬಾರದು ಎಂದು ಸೂಚಿಸಿದೆ.
ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಮತ್ತು ಗೌಪ್ಯವಾಗಿಡಲಾಗಿದೆ ಎಂದು ಆಯೋಗವು ಖಚಿತಪಡಿಸಿಕೊಳ್ಳಬೇಕು. ಈ ಪ್ರಕರಣ ಇತ್ಯರ್ಥವಾಗುವರೆಗೆ ಯಾವುದೇ ಕಾರಣಕ್ಕೂ ಸಂಗ್ರಹಿಸಿದ ಮಾಹಿತಿ ಸೋರಿಕೆ ಆಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಅಫಿಡವಿಟ್ ಸಲ್ಲಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಷರತ್ತು ವಿಧಿಸಿ ಡಿಸೆಂಬರ್ ಎರಡನೇ ವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.