ಗುತ್ತಿಗೆದಾರನಿಗೆ ಬೆದರಿಕೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

Date:

Advertisements

ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ದೂರು ರದ್ದುಪಡಿಸುವಂತೆ ಕೋರಿ ಬಿಜೆಪಿಯ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. “ಅರ್ಜಿ ವಜಾಗೊಳಿಸಲಾಗಿದೆ. ಮುಂದೆ ಅಧಿಸೂಚನೆ ಹೊರಡಿಸುವಾಗ, ಸಮಿತಿ ರಚಿಸುವಾಗ ಅಥವಾ ಸರ್ಕಾರ ಆದೇಶ ಮಾಡುವಾಗ ದೋಷಗಳು ಇರಬಾರದು” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

ಆದೇಶ ಪ್ರಕಟಿಸುವವರೆಗೆ ಪ್ರಕರಣದಲ್ಲಿ ಮುಂದುವರಿಯಬಾರದು ಎಂದು ಸಿಐಡಿ ಪೊಲೀಸರಿಗೆ ಹೈಕೋರ್ಟ್‌ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತ್ತು. ಈಗ ಅರ್ಜಿ ವಜಾ ಆಗಿರುವುದರಿಂದ ಮಧ್ಯಂತರ ಆದೇಶವೂ ವಜಾಗೊಳ್ಳಲಿದೆ.

Advertisements

ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರದೀಪ್‌ ಅವರು “ಅರ್ಜಿದಾರರ ವಿರುದ್ಧದ ತನಿಖೆಗೆ ಅನುಮತಿ ಕೇಳಲಾಗಿದೆ. ಆದರೆ, ಇನ್ನೂ ಪೂರ್ವಾನುಮತಿ ದೊರೆತಿಲ್ಲ. ಸಿಐಡಿಗೆ ಪೊಲೀಸ್ ಠಾಣೆ ಮಾನ್ಯತೆ ನೀಡಿ ಗೃಹ ಇಲಾಖೆ ಆದೇಶ ಮಾಡಿದೆ. ಸಿಐಡಿ ತನಿಖಾಧಿಕಾರಿಗಳು ಒಳಗೊಂಡ ತಂಡವನ್ನು ತನಿಖೆಗೆ ರಚನೆ ಮಾಡಲಾಗಿದೆ. ಹೀಗಾಗಿ, ತನಿಖೆ ನಡೆಸಿ ವರದಿ ಸಲ್ಲಿಸುವ ಅಧಿಕಾರ ಸಿಐಡಿಯ ಎಸ್‌ಐಟಿಗೆ ಇದೆ. ಅರ್ಜಿದಾರರ ಮೇಲಿನ ಆರೋಪಗಳು ಗಂಭೀರವಾಗಿದ್ದು, ಆ ಕುರಿತು ತನಿಖೆ ಹಾಗೂ ವಿಚಾರಣೆ ನಡೆಸುವುದು ಅಗತ್ಯವಾಗಿದೆ. ಹಾಗಾಗಿ, ಅರ್ಜಿ ವಜಾಗೊಳಿಸಬೇಕು” ಎಂದು ಕೋರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ಕಾಯ್ದೆ ಒಪ್ಪದವರನ್ನು ಅನಾಗರಿಕರು ಎನ್ನುವುದು ಎಷ್ಟು ಸರಿ?

ಮುನಿರತ್ನ ಪರ ವಾದಿಸಿದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ದೂರುದಾರ 2019 ರಿಂದ 2024ರವರೆಗೆ ನಡೆದಿರುವ ಕೃತ್ಯಗಳ ಬಗ್ಗೆ 2024ರ ಸೆಪ್ಟೆಂಬರ್‌ 13ರಂದು ವೈಯಾಲಿಕಾವಲ್‌ ಠಾಣೆ ದೂರು ನೀಡಿದ್ದಾರೆ. ಅಂದರೆ ದೂರು ನೀಡುವಲ್ಲಿಯೇ ವಿಳಂಬ ಮಾಡಿದ್ದಾರೆ. ಇದು ಕಾನೂನಿನಡಿ ಒಪ್ಪಿತವಲ್ಲ. ಇನ್ನೂ ದೂರು ದಾಖಲಿಸಿದ ನಂತರ ಕೂಡಲೇ ಪ್ರಕರಣದ ತನಿಖೆಯನ್ನು ಸಿಐಡಿಯ ಎಸ್‌ಐಟಿಗೆ ವರ್ಗಾಯಿಸಲಾಗಿದೆ. ಆದರೆ, ಸಿಐಡಿಯ ಎಸ್ಐಟಿಗೆ ಪೊಲೀಸ್ ಠಾಣೆ ಮಾನ್ಯತೆ ಇಲ್ಲ. ಇಂತಹ ಸಂದರ್ಭದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವ ಅಧಿಕಾರವೂ ಎಸ್‌ಐಟಿಗೆ ಇಲ್ಲ. ಮುನಿರತ್ನ ಶಾಸಕರಾಗಿದ್ದು, ಅವರ ವಿರುದ್ಧ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ ಪ್ರಕರಣ ಕುರಿತ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು” ಎಂದು ಕೋರಿದ್ದರು. ಈ ವಾದವನ್ನು ನ್ಯಾಯಾಲಯವು ತಿರಸ್ಕರಿಸಿದೆ.

ಗುತ್ತಿಗೆದಾರ ಚೆಲುವರಾಜು ಅವರು “ರಾಜರಾಜೇಶ್ವರಿ ನಗರ ಕ್ಷೇತ್ರದ ವಾರ್ಡ್‌ ಸಂಖ್ಯೆ 42ರಲ್ಲಿ (ಲಕ್ಷ್ಮಿದೇವಿ ನಗರ) ಗಂಗಾ ಎಂಟರ್‌ಪ್ರೈಸಸ್‌ ಎಂಬ ಹೆಸರಿನಲ್ಲಿ ಘನತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಮಾಡುತ್ತಿದ್ದು, 2021ರ ಸೆಪ್ಟೆಂಬರ್‌ನಲ್ಲಿ ಮುನಿರತ್ನ ಅಂಗರಕ್ಷಕ ವಿಜಯಕುಮಾರ್‌ ಅವರು ಕರೆ ಮಾಡಿ ಶಾಸಕರ ಕಚೇರಿಗೆ ಬರುವಂತೆ ಸೂಚಿಸಿದ್ದರು. ಘನತ್ಯಾಜ್ಯ ಸಂಗ್ರಹಣೆ ಕೆಲಸಕ್ಕೆ 10 ಆಟೊ ರಿಕ್ಷಾ ಕೊಡಿಸುತ್ತೇನೆ. ಅದಕ್ಕೆ 20 ಲಕ್ಷ ಕೊಡುವಂತೆ ಮುನಿರತ್ನ ಬೇಡಿಕೆ ಇಟ್ಟಿದ್ದರು. ಸ್ನೇಹಿತರ ಬಳಿ ರೂ. 20 ಲಕ್ಷ ಸಾಲ ಪಡೆದು ಮುನಿರತ್ನ ಅವರಿಗೆ ಅಂಗರಕ್ಷಕನ ಮೂಲಕ ತಲುಪಿಸಿದ್ದೆ. ಎರಡು ದಿನಗಳ ಬಳಿಕ ವಿಚಾರಿಸಲಾಗಿ 10 ಆಟೊ ಹೆಚ್ಚುವರಿ ನೀಡುವುದಾಗಿ ಹೇಳಿ ವಂಚಿಸಿದ್ದಾರೆ” ಎಂದು ದೂರಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ಮುನಿರತ್ನ ಅವರು ತಮ್ಮ ಆಪ್ತ ಸಹಾಯಕ ಅಭಿಷೇಕ್‌ನಿಂದ ಕರೆ ಮಾಡಿಸಿ ಕಚೇರಿಗೆ ಕರೆಸಿ, 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 15 ಲಕ್ಷ ರೂಪಾಯಿಯನ್ನು ಸಾಲ ಪಡೆದು ಹೊಂದಿಸಿಕೊಡುತ್ತೇನೆ ಎಂದು ತಿಳಿಸಿದ್ದೆ. ಆಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ತಕ್ಷಣ ಹಣ ತಂದುಕೊಂಡುವಂತೆ ಸೂಚಿಸಿದ್ದರು. ಮತ್ತೆ ಕಚೇರಿಗೆ ಕರೆಸಿ, ಹಣ ತಂದಿಲ್ಲವೆಂದು ಹಲ್ಲೆ ನಡೆಸಿದ್ದರು. ಇದಲ್ಲದೆ ಅಭಿಷೇಕ್‌, ವಿಜಯಕುಮಾರ್‌ ಅವರು ಕೂಡ ಹಲ್ಲೆ ಮಾಡಿದ್ದರು ಎಂದು ಚೆಲುವರಾಜು ದೂರಿದ್ದಾರೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ಗಳಾದ 504, 506, 420, 323, 385, 37ರ ಅಡಿ ಮುನಿರತ್ನ, ವಿಜಯ್‌ಕುಮಾರ್‌, ಅಭಿಷೇಕ್‌ ಮತ್ತು ವಸಂತ್‌ ಕುಮಾರ್‌ ವಿರುದ್ಧ ವೈಯಾಲಿಕಾವಲ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X