- ರೈತರ ಪಾಲಿಗೆ ಈ ಸರ್ಕಾರ ಜೀವಂತವಾಗಿಲ್ಲ: ಬೊಮ್ಮಾಯಿ ಆರೋಪ
- ‘ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ’
ಲಿಂಗಾಯತ ಅಧಿಕಾರಿಗಳ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎತ್ತಿರುವಂತಹ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉತ್ತರ ನೀಡುವವರೆಗೂ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ” ಎಂದು ಅಭಿಪ್ರಾಯ ಪಟ್ಟರು.
“ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬರುತ್ತಿದೆ. ವರ್ಗಾವಣೆ ವಿಷಯದಲ್ಲಿ ಬಹಳಷ್ಟು ಅಸಮಾಧಾನಕ್ಕೆ ಈಡಾಗಿದೆ. ಎಲ್ಲ ಸಮಾಜಕ್ಕೂ ನ್ಯಾಯ ಕೊಡುತ್ತೇವೆ ಅಂತ ಹೇಳಿದ್ದರು. ಆದರೆ ಅದು ಆಗಿಲ್ಲ. ಈಗ ಬೇರೆ ಬೇರೆ ರೂಪದಲ್ಲಿ ಹೊರಗೆ ಬರುತ್ತಿದೆ” ಎಂದರು.
ಜಾತಿಗಣತಿಯಲ್ಲ
ರಾಜ್ಯ ಸರ್ಕಾರ ಜಾತಿಗಣತಿ ಬಿಡುಗಡೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು 2014-15 ರಲ್ಲಿ ಶೈಕ್ಷಣಿಕ ಮತ್ತು ಆರ್ಥಿಕತೆಯ ಗಣತಿಗೆ ಆಜ್ಞೆ ಮಾಡಿದ್ದೆವು. ಎಲ್ಲೂ ಕೂಡ ಜಾತಿಗಣತಿ ಮಾಡಲು ಹೇಳಿರಲಿಲ್ಲ. ಎಲ್ಲರಿಗೂ ಕೂಡ ಗೊತ್ತಿದೆ ಇದು ಜಾತಿಗಣತಿಯಲ್ಲ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ
ಸಮಾಜ ಘಾತಕ ಶಕ್ತಿಗಳಿಗೆ ಪ್ರಚೋದನೆ
“ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಆಡಳಿತವನ್ನು ಸುಸೂತ್ರವಾಗಿ ನಡೆಸಲು ಆಗುವುದಿಲ್ಲ. ಒಂದು ವರ್ಗವನ್ನು ಪೊಲೀಸರು ಮುಟ್ಟಬಾರದು ಅಂತ ಪರೋಕ್ಷವಾಗಿ ಸಂದೇಶ ಬೇಕಾದಷ್ಟಿದೆ. ಸಮಾಜಘಾತಕ ಶಕ್ತಿಗಳಿಗೆ ಕಾನೂನು, ಪೋಲಿಸ್, ಸರ್ಕಾರದ ಭಯ ಇಲ್ಲ. ಕೋಲಾರದಲ್ಲಿ ಘಟನೆ ನಡೆದಿತ್ತು. ಹೀಗಾಗಿ ಶಿವಮೊಗ್ಗದಲ್ಲಿ ಪೂರ್ವ ಬಂದೋಬಸ್ತ್ ಮಾಡಬೇಕಿತ್ತು. ಈದ್ ಮಿಲಾದ್ ಮೆರವಣಿಗೆಯಲ್ಲಿ ಬಂದೋಬಸ್ತ್ ಯಾಕೆ ಮಾಡಲಿಲ್ಲ. ಸರ್ಕಾರ ಬಂದ ನಂತರ ಸಮಾಜಘಾತಕ ಶಕ್ತಿಗಳಿಗೆ ಪ್ರಚೋದನೆ ಸಿಗುತ್ತಿದೆ” ಎಂದು ದೂರಿದರು.
ಸರ್ಕಾರ ಜೀವಂತವಾಗಿಲ್ಲ
ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಮಾತನಾಡಿದ ಅವರು, “ಬರ ಪರಿಹಾರ ನಾವು ಸಮರ್ಥವಾಗಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಬರೀ ಹೇಳಿಕೆಯಲ್ಲಿ ಇವರ ಸರ್ಕಾರ ಆಡಳಿತ ನಡೆಯುತ್ತಿದೆ. ಬರಗಾಲವಾಗಿ ಮೂರು ತಿಂಗಳಾಯಿತು. ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ಬರಗಾಲಕ್ಕೆ ಇದುವರೆಗೂ ನಯಾ ಪೈಸೆ ಬಿಡುಗಡೆ ಆಗಿಲ್ಲ. ಕುಡಿಯುವ ನೀರಿನ ಸಮಸ್ಯೆಗೆ ಇದುವರೆಗೂ ಕ್ರಮ ಕೈಗೊಂಡಿಲ್ಲ” ಎಂದು ವಾಗ್ದಾಳಿ ನಡೆಸಿದರು.
“ಅನಗತ್ಯವಾಗಿ ಕೇಂದ್ರಕ್ಕೆ ಬೊಟ್ಟು ಮಾಡಿ ತೋರಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ವಿಕೋಪ ನಿಧಿ ಈಗಾಗಲೇ ಇದೆ. ಕೂಡಲೇ ಅದನ್ನು ಬಿಡುಗಡೆ ಮಾಡಿ, ಆಮೇಲೆ ಕೇಂದ್ರದಿಂದ ತೆಗೆದುಕೊಳ್ಳಿ ನಾವು ನಿಮ್ಮ ಜೊತೆ ಇರುತ್ತೇವೆ. ನಮ್ಮ ಅವಧಿಯಲ್ಲಿ ಪ್ರವಾಹ ಬಂತು, ನಾವು ಕೇಂದ್ರಕ್ಕಾಗಿ ಕಾಯುತ್ತ ಕೂರಲಿಲ್ಲ. ಸರ್ಕಾರ ಜೀವಂತ ಇದ್ದದ್ದು ಇಂತಹ ಸಂಕಷ್ಟದಲ್ಲಿ ಗೊತ್ತಾಗುತ್ತದೆ. ಈ ಸರ್ಕಾರ ರೈತರ ಪಾಲಿಗೆ ಜೀವಂತ ಇಲ್ಲ ಅನ್ನುವುದು ಸ್ಪಷ್ಟವಾಗಿದೆ” ಎಂದು ಟೀಕಿಸಿದರು.
ಮದ್ಯದಂಗಡಿ ಸಿಎಂ ಡಿಸಿಎಂ ಗೊಂದಲ
“ಪಂಚಾಯತಿಗೊಂದು ಮದ್ಯದ ಅಂಗಡಿ ತೆರೆಯುವುದನ್ನು ನಾವು ಮೊದಲೇ ವಿರೋಧ ಮಾಡಿದ್ದೇವೆ, ಜನ ಕೂಡ ವಿರೋಧ ಮಾಡಿದ್ದಾರೆ. ಗೃಹಲಕ್ಷ್ಮಿ ಅಂತ ದುಡ್ಡು ಕೊಟ್ಟು, ಅದರ ಎರಡು ಪಟ್ಟು ಆ ಸಂಸಾರದಿಂದ ಕಿತ್ತುಕೊಳ್ಳುವಂಥ ಕೆಲಸ ಸರ್ಕಾರ ಮಾಡುತ್ತಿದೆ. ಸರ್ಕಾರ ಅಬಕಾರಿ ನೀತಿಗಳನ್ನು ಮುಚ್ಚಿ ಹಾಕುವಂತಹ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳು ಹೊಸ ಬಾರ್ ಲೈಸೆನ್ಸ್ ಕೊಡುವುದಿಲ್ಲ ಅಂತ ಹೇಳುತ್ತಾರೆ. ಉಪಮುಖ್ಯಮಂತ್ರಿಗಳು ಆಯಕಟ್ಟು ಜಾಗದಲ್ಲಿ ಬಾರ್ ಮಾಡಬೇಕಾಗುತ್ತದೆ ಅಂತ ಹೇಳುತ್ತಾರೆ. ಇವರ ನಿರ್ಣಯ ಗೊಂದಲದ ಗೂಡಾಗಿದೆ. ಮುಖ್ಯಮಂತ್ರಿಗಳು ಮಾಡುವಂತಹ ಎಲ್ಲ ನಿರ್ಣಯಗಳಿಗೆ ಉಪಮುಖ್ಯಮಂತ್ರಿ ವಿರೋಧ ಮಾಡುತ್ತಿದ್ದಾರೆ. ಈ ಸರ್ಕಾರ ಜನರಿಗಂತೂ ಒಳ್ಳೇದು ಮಾಡುವುದಿಲ್ಲ” ಎಂದರು.