ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ.
2014ರಲ್ಲಿ ನಡೆದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಇಂದು (ಅಕ್ಟೋಬರ್ 24) ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಆದೇಶ ನೀಡಿದ್ದಾರೆ.
ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್ನಲ್ಲಿ ಐದು ವರ್ಷ ಶಿಕ್ಷೆ ವಿಧಿಸಿದೆ.
ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಿದೆ.
ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ
2014 ರ ಆಗಸ್ಟ್ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ಇಂದಿಗೆ (ಅಕ್ಟೋಬರ್ 24) ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಅಂತಿಮ ತೀರ್ಪು ನೀಡಿದೆ.
ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ದೊಡ್ಡ ಮಟ್ಟದ ಘರ್ಷಣೆಗೆ ಕಾರಣ, ಗ್ರಾಮದಲ್ಲಿದ್ದ ಅಸ್ಪೃಶ್ಯತೆ. ಗ್ರಾಮದಲ್ಲಿ ಸವರ್ಣೀಯರು ನಡೆಸುತ್ತಿದ್ದ ಅಸ್ಪೃಶ್ಯತೆಯನ್ನು ಗ್ರಾಮದ ದಲಿತರು ಖಂಡಿಸಿದ್ದರು. ಇದರಿಂದ ಸವರ್ಣೀಯರು ಮತ್ತು ದಲಿತರ ನಡುವೆ ಆರೋಪ, ಪ್ರತ್ಯಾರೋಪ, ದೂರು ಪ್ರತಿದೂರು ನೀಡುವುದು ನಡದೇ ಇತ್ತು.
ಆದರೆ ಆಗಸ್ಟ್ 28 , 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ದಲಿತ ಸಮುದಾಯದ ಮಂಜುನಾಥ ಮತ್ತು ಸ್ನೇಹಿತರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಸವರ್ಣೀಯರು ಜಗಳ ಆರಂಭಿಸಿದ್ದರು. ಅಂದು ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.
