ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಸಿಎಂ ಸಿದ್ದರಾಮಯ್ಯ ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಅಂತರ್ಜಾತಿ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ. ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ” ಎಂದರು.
“ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ” ಎಂದು ಹೇಳಿದರು.
