ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿವುದನ್ನು ಕಡ್ಡಾಯಗೊಲಿಸಿರುವ ಸರ್ಕಾರ, e-KYC ಪ್ರಕ್ರಿಯೆಗೆ ನಿಗದಿಯಾಗಿದ್ದ ಗಡುವನ್ನು ವಿಸ್ತರಿಸಿದೆ. ಅಕ್ಟೋಬರ್ 20ರವರೆಗೆ ಇ-ಕೆವೈಸಿ ಮುಂದುವರೆಸಲು ಆದೇಶ ಹೊರಡಿಸಿದೆ.
ಈ ಮೊದಲು ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಅನ್ನು ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು. ಆದಾಗ್ಯೂ, ರಾಜ್ಯದಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ದಿನಂಪ್ರತಿ ತೀವ್ರ ಜನದಟ್ಟಣೆ ಕಂಡುಬರುತ್ತಿತ್ತು. ಇದರೊಂದಿಗೆ ತಾಂತ್ರಿಕವಾಗಿ ಸರ್ವರ್ ಡೌನ್ ಸಮಸ್ಯೆಗಳು ಪದೇ ಪದೇ ಎದುರಾಗುತ್ತಿದ್ದವು. ಪರಿಣಾಮವಾಗಿ, ಸಾರ್ವಜನಿಕರು ತಮ್ಮ ನಿತ್ಯದ ಕೆಲಸ-ಕಾರ್ಯಗಳನ್ನು ಬದಿಗೊತ್ತಿ ಗಂಟೆಗಟ್ಟಲೆ ಸರತಿಯಲ್ಲಿ ನಿಂತು ತೊಂದರೆ ಅನುಭವಿಸುವಂತಾಗಿತ್ತು.
ಪ್ರಸ್ತುತ ರಾಜ್ಯದಲ್ಲಿ ಇನ್ನೂ ಒಂದು ಕೋಟಿಗೂ ಅಧಿಕ ಪಡಿತರ ಚೀಟಿಗಳಿಗೆ ಇ-ಕೆವೈಸಿ ಪ್ರಕ್ರಿಯೆ ಬಾಕಿ ಉಳಿದಿದೆ. ಇತ್ತ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ತಮ್ಮ ಮೊಬೈಲ್ ಫೋನ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಹೊಸ ಯೋಜನೆಯೊಂದನ್ನು ಸರ್ಕಾರ ಸಿದ್ಧಪಡಿಸುತ್ತಿದ್ದು, ಅದನ್ನು ಜಾರಿಗೆ ತರಲು ಇನ್ನು ಒಂದು ವಾರದ ಸಮಯಾವಕಾಶ ಬೇಕಾಗಬಹುದು. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಗಡುವನ್ನು ವಿಸ್ತರಿಸಿರುವುದಾಗಿ ಸರ್ಕಾರ ಹೇಳಿಕೊಂಡಿದೆ.
ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರತಿ 5 ವರ್ಷಕ್ಕೊಮ್ಮೆ ಪಡಿತರ ಚೀಟಿದಾರರು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ರಾಜ್ಯದ ಸುಮಾರು 2.67 ಕೋಟಿ ಫಲಾನುಭವಿಗಳು ಈ ನಿಯಮದ ವ್ಯಾಪ್ತಿಗೆ ಬರಲಿದ್ದು, ನಿಯಮಿತವಾಗಿ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತಹ ಪಡಿತರ ಚೀಟಿಗಳು ರದ್ದಾಗುವ ಅಥವಾ ಆಹಾರ ಧಾನ್ಯ ವಿತರಣೆ ಸ್ಥಗಿತಗೊಳ್ಳುವ ಸಾಧ್ಯತೆ ಇರುತ್ತದೆ.
ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾರ್ವಜನಿಕರು ಕುಟುಂಬದ ಎಲ್ಲ ಸದಸ್ಯರ ಮೂಲ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಂಖ್ಯೆ, ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ ಹಾಗೂ ಎಲ್ಪಿಜಿ ಗ್ಯಾಸ್ ಸಂಪರ್ಕದ ವಿವರಗಳನ್ನು ಒದಗಿಸಬೇಕಾಗುತ್ತದೆ.




