ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ/ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ಪೀಠವು ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಮೃತ ಬಾಲಕಿಯ ತಂದೆ ಧರ್ಮಸ್ಥಳದ ಪಾಂಗಳದ ನಿವಾಸಿ ಚಂದಪ್ಪ ಗೌಡ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೀಠವು ನಡೆಸಿತು. ವಿಚಾರಣೆಯ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಎಂ ಆರ್ ಬಾಲಕೃಷ್ಣ ವಾದ ಮಂಡಿಸಿದರು.
“ಪ್ರಕರಣದಿಂದ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ. ಮೇಲ್ಮನವಿಯ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಗೊಳಿಸಬೇಕು” ಎಂದು ಅವರು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ಪೀಠ ರೋಸ್ಟರ್ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಯವರಿಗೆ ಸೂಚಿಸಿದೆ.

ರಾಜ್ಯ ಗೃಹಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ, ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ,ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ, ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಖುಲಾಸೆಗೊಂಡಿರುವ ಆರೋಪಿ ಸುಂತೋಷ್ ರಾವ್ ಹತ್ತನೇ ಪ್ರತಿವಾದಿಯಾಗಿದ್ದಾರೆ.
ಆರೋಪಿ ಸಂತೋಷ್ ರಾವ್ ನಿರಪರಾಧಿ, ಆತನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ ಎಂದು ಜೂನ್ ೧೬ರಂದು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಈ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಮಾಡಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕಳೆದ ಎಂಟು ತಿಂಗಳಿನಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ದಕ್ಷಿಣಕನ್ನಡದಲ್ಲಿ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರ ಮರು ತನಿಖೆಗೆ ಆದೇಶ ನೀಡಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿದೆ. ಈಗ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿ ವಿಚಾರಣೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
