ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರ ಕೈಬಿಟ್ಟಿದೆ. ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಗ್ಯಾರಂಟಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ರಾಜ್ಯದಲ್ಲಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ಯೋಜನೆಗಳ ಸಮರ್ಪಕ ಜಾರಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.
ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಯಡಿ, ಮೇ ಅಂತ್ಯದವರೆಗೆ ಒಟ್ಟು 763 ಕೋಟಿ ಮಹಿಳಾ ಪ್ರಯಾಣಿಕರು ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇವರಿಗೆ ವಿನಿಯೋಗಿಸಲಾದ ಟಿಕೆಟ್ನ ಒಟ್ಟು ಮೌಲ್ಯ 20,047.69 ಕೋಟಿ ರೂಪಾಯಿಗಳಾಗಿವೆ. ಇದರ ಜೊತೆಗೆ, 2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೆಲ್ಲರನ್ನೂ ಸೇರಿಸಿ ಒಟ್ಟು 10 ಲಕ್ಷ ಉಚಿತ ಬಸ್ ಪಾಸ್ಗಳನ್ನು ವಿತರಿಸಲು ಸರ್ಕಾರ ಅಂದಾಜು ಮಾಡಿದೆ ಎಂದು ಅವರು ವಿವರಿಸಿದರು.
‘ಗೃಹ ಜ್ಯೋತಿ’ ಯೋಜನೆಯಡಿ ಮೇ ಅಂತ್ಯದವರೆಗೆ ರಾಜ್ಯದ 1.65 ಕೋಟಿ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯದ ಲಾಭ ಪಡೆದುಕೊಂಡಿದ್ದಾರೆ. ಆದರೆ, ಹೊರ ರಾಜ್ಯಗಳಿಂದ ಬಂದು ಇಲ್ಲಿ ನೆಲೆಸಿ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯುತ್ತಿರುವವರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಮೈದಾನದಲ್ಲಿ ಮಾಸದ ಮೋಡಿ: 39ರ ವಯಸ್ಸಿನಲ್ಲೂ ಮಿಂಚುತ್ತಿರುವ ಮೆಸ್ಸಿ; ಫುಟ್ಬಾಲ್ ದಿಗ್ಗಜರ ಸ್ವಾರಸ್ಯಗಳು
ರಾಜ್ಯದ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಮಾತ್ರವೇ ಸರ್ಕಾರದ ಈ ಯೋಜನೆಗಳ ಫಲಾನುಭವಿಗಳಾಗಿರುತ್ತಾರೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುವ ಸಂದರ್ಭದಲ್ಲಿ, ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಹೆಸರು ಪಟ್ಟಿಯಿಂದ ಬಿಟ್ಟುಹೋಗದಂತೆ ತೀವ್ರ ಎಚ್ಚರಿಕೆ ವಹಿಸಲು ನಿರ್ದೇಶನ ನೀಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ನೀಡಲಾಗುತ್ತಿರುವ ನಗದು ಪ್ರಕ್ರಿಯೆ ಮುಂದುವರೆದಿದ್ದು, ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಇದುವರೆಗೆ ಒಟ್ಟು 11,561 ಕೋಟಿ ರೂ.ಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜುಲೈ-2023 ರಿಂದ ಡಿಸೆಂಬರ್-2024ರ ವರೆಗಿನ ಅವಧಿಯಲ್ಲಿ 72,02,33,970 ಫಲಾನುಭವಿಗಳಿಗೆ (ಒಟ್ಟು ಪಾವತಿ ಲೆಕ್ಕಾಚಾರದಲ್ಲಿ) ಡಿಬಿಟಿ ಮೂಲಕ ಈ ಹಣ ವರ್ಗಾವಣೆಯಾಗಿದೆ. ತದನಂತರ, 2025ರ ಫೆಬ್ರವರಿ ತಿಂಗಳಿನಿಂದ ಈವರೆಗೆ ರಾಜ್ಯದ ಒಟ್ಟು 4,44,67,942 ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತಿದೆ.
ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಲಾಗುವ ಅಕ್ಕಿಯು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟವಾಗುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ. ಇಂತಹ ಅಕ್ರಮ ದಂಧೆಯನ್ನು ಬೇರುಸಹಿತ ನಿಗ್ರಹಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.




