ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ನಿಮ್ಮ ನಿಲುವೇನು? ಮರು ತನಿಖೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಯಾವ ಕ್ರಮವನ್ನು ತೆಗೆದುಕೊಳ್ಳುತ್ತೀರಿ ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು, ಸಮಯಾವಕಾಶ ನೀಡಿದ್ದರೂ ಅಗತ್ಯ ಕ್ರಮಗಳ ಬಗ್ಗೆ ವಿವರ ನೀಡದ ಕಾರಣ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಇದನ್ನು ಓದಿದ್ದೀರಾ? BREAKING NEWS | ಸೌಜನ್ಯ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಸೂಚನೆ
ಈ ಪ್ರಕರಣವನ್ನು ಮರುಪರಿಶೀಲಿಸಲು ವಿಶೇಷ ತನಿಖಾ ತಂಡ (SIT) ರಚಿಸಲು ಸಾಧ್ಯವಿದೆಯೇ ಎಂಬುದನ್ನು ಸ್ಪಷ್ಟಪಡಿಸಿ ಅಫಿಡವಿಟ್ ಸಲ್ಲಿಸಬೇಕು. ಇತರ ಆರೋಪಿಗಳ ಪಾತ್ರವನ್ನೂ ಪರಿಶೀಲಿಸುವ ಬಗ್ಗೆಯೂ ನಿಲುವು ತಿಳಿಸಬೇಕು ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವಿಶ್ಕರ್ ಸಿಂಘ್ವಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಇನ್ನು ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ, ಆನಂದ್ ಸಂಜಯ್ ಎಂ ನುಲಿ ಮತ್ತು ಶೇಖರ್ ಜಿ ದೇವಾಸ ಹಾಜರಿದ್ದರು. “ಸಂತ್ರಸ್ತೆಗೆ ಸೇರಿದ ವಸ್ತುಗಳನ್ನು ಸುರಕ್ಷಿತವಾಗಿ ಇಡಲಾಗಿದೆ. ಡಿಎನ್ಎ ಪರೀಕ್ಷೆ ನಡೆಸಿದರೆ ಸತ್ಯಾಂಶ ಬಯಲಿಗೆ ಬರಲಿದೆ. ನಿಜವಾದ ಆರೋಪಿಗಳು ಬೇರೆ ವ್ಯಕ್ತಿಗಳು ಎಂದು ವಿಚಾರಣಾ ನ್ಯಾಯಾಲಯವೂ ತಿಳಿಸಿದೆ” ಎಂದು ವಾದಿಸಿದರು. ಹಾಗೆಯೇ ಪ್ರಕರಣದ ಹಲವು ಸಾಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿರುವುದನ್ನು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ಕೋರ್ಟ್ ಸಾಕ್ಷಿಗಳಿಗೆ ರಕ್ಷಣೆ ಒದಗಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದೆ.
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ
2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಧರ್ಮಸ್ಥಳದ ಬಳಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಮರುದಿನ ಆಕೆಯ ಮೃತದೇಹ ನೇತ್ರಾವತಿ ಸ್ನಾನಘಟ್ಟದ ಬಳಿಯ ಪೊದೆಯಲ್ಲಿ ಸಿಕ್ಕಿತ್ತು.
ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಮಾತ್ರವಲ್ಲದೆ ದೇಶದ ಹಲವು ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ವೇಳೆಯೇ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕೊಲೆ, ನಿಗೂಢ ಸಾವು, ನಾಪತ್ತೆ ಪ್ರಕರಣಗಳು ಮುನ್ನೆಲೆಗೆ ಬಂದಿತ್ತು.
ಇದನ್ನು ಓದಿದ್ದೀರಾ? ಸೌಜನ್ಯ ಪ್ರಕರಣ | ನ್ಯಾಯಯುತ ಮರು ತನಿಖೆಗೆ ‘ಕೊಂದವರು ಯಾರು?’ ಆಂದೋಲನ ಒತ್ತಾಯ
ಸೌಜನ್ಯ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ನಂತರ 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಈ ನಡುವೆ ಪ್ರಕರಣದ ಸಾಕ್ಷಿಯಾಗಿದ್ದ ರವಿ ಪೂಜಾರಿ ಎಂಬುವವರು ನಿಗೂಢವಾಗಿ ಸಾವನ್ನಪ್ಪಿದ್ದರು. ಸೌಜನ್ಯ ಅತ್ಯಾಚಾರ ಕೊಲೆ ನಡೆದ ಎರಡು ದಿನದಲ್ಲೇ ಸಂತೋಷ್ ರಾವ್ ಎಂಬಾತನ ಬಂಧನ ಮಾಡಲಾಗಿತ್ತು. ಸುಮಾರು 11 ವರ್ಷಗಳ ಕಾಲ ಸಂತೋಷ್ ಜೈಲಿನಲ್ಲಿದ್ದರು.
ಆದರೆ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ ಸಂತೋಷ್ ಅವರು 2023ರಲ್ಲಿ ಸಂತೋಷ ರಾವ್ ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಇವಿಷ್ಟು ನಡೆಯುತ್ತಿದ್ದಂತೆ ನಿಜಕ್ಕೂ ಈ ನೀಚ ಕೃತ್ಯವನ್ನು ಎಸಗಿದವರು ಯಾರು ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಸೌಜನ್ಯ ತಾಯಿ ನ್ಯಾಯಕ್ಕಾಗಿ ಕಾನೂನು ಹೋರಾಟ ಮುಂದುವರೆಸಿದ್ದಾರೆ.




