ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮಹಾರಾಷ್ಟ್ರ ಸಿಎಂ ಪತ್ರಕ್ಕೆ, ನಮ್ಮ ಮುಖ್ಯಮಂತ್ರಿಗಳು ಪತ್ರ ಬರೆದ ನಂತರ, ಈ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುಮ್ಮನಹಳ್ಳಿ ಮಾಗಡಿ ರಸ್ತೆಯಲ್ಲಿರುವ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಜಮೀನು ಹಾಗೂ ಇದೇ 27 ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿರುವ ಡಾ. ಬಾಬು ಜಗಜೀವನ್ ರಾಮ್ ಸಂಶೋಧನಾ ಸಂಸ್ಥೆಯ ಸಭಾಂಗಣವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ವೀಕ್ಷಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.
“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಪತ್ರಕ್ಕೆ ನಮ್ಮ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ನಾನು ನನ್ನ ಅಭಿಪ್ರಾಯವನ್ನು ಈಗಾಗಲೇ ಕಳುಹಿಸಿಕೊಟ್ಟಿದ್ದೇನೆ. ಸಿಎಂ ಬರೆಯುವ ಪತ್ರವನ್ನು ಎಲ್ಲಾ ಸಂಸದರಿಗೆ ಕಳುಹಿಸಿಕೊಡುತ್ತೇನೆ. ನಂತರ ಈ ವಿಚಾರವಾಗಿ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ದಿನಾಂಕ ಕೇಳುತ್ತೇವೆ. ಈ ವಿಚಾರವಾಗಿ ನಾವೆಲ್ಲಾ ಸೇರಿ ಒತ್ತಾಯ ಮಾಡಲೇಬೇಕು” ಎಂದು ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆ ಜಾಗ ಬದಲಿಗೆ ಸಂಪುಟ ಸಭೆಯಲ್ಲಿ ಪ್ರಸ್ತಾವನೆ
ಕೆಂಪೇಗೌಡ ಜಯಂತಿ ಕಾರ್ಯಕ್ರಮ ಸ್ಥಳ ವೀಕ್ಷಣೆ ಬಗ್ಗೆ ಕೇಳಿದಾಗ, “ಈ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಇಲ್ಲಿ ನಡೆಸಲು ತೀರ್ಮಾನಿಸಿದ್ದೇವೆ. ನಮ್ಮ ಸರ್ಕಾರ ಸಮೀಪದಲ್ಲೇ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನು ನಿಗದಿ ಮಾಡಿದೆ. ಈ ಜಾಗದಲ್ಲಿ ಜೂ.27ರಂದು ಶಂಕುಸ್ಥಾಪನೆ ಮಾಡಿ, ನಂತರ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಇಲ್ಲಿ ಆಚರಿಸಲು ಮುಂದಾಗಿದ್ದೇವೆ. ಇಲ್ಲಿ ಕೆಂಪೇಗೌಡರ ಇತಿಹಾಸ ಸಾರುವ ವಸ್ತುಪ್ರದರ್ಶನ ಕೇಂದ್ರ ನಿರ್ಮಾಣ ಮಾಡಲಾಗುವುದು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಸರ್ಕಾರದ ‘ಗೃಹ ಆರೋಗ್ಯ’ ಮತ್ತೊಂದು ಗ್ಯಾರಂಟಿ ಯೋಜನೆಯೇ?
ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ
ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಕೇಂದ್ರ ಸಚಿವಾಲಯಗಳು ಅಲ್ಲಿರುವ ಕಾರಣ ದೆಹಲಿಗೆ ತೆರಳಬೇಕಾಗುತ್ತದೆ. ಸಧ್ಯಕ್ಕೆ ನನಗೆ ದೆಹಲಿಯಲ್ಲಿ ಯಾವುದೇ ಕಾರ್ಯಕ್ರಮ ಇಲ್ಲ. ಸಿಎಂ ಅವರ ಕಾರ್ಯಕ್ರಮ ಇರಬಹುದು. ಹೈಕಮಾಂಡ್ ನನಗೆ ಭೇಟಿ ಮಾಡಲು ತಿಳಿಸಿದರೆ ನಾನು ಹೋಗುತ್ತೇನೆ. ಆದರೆ ನಾನು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಬೇಕಿದ್ದು, ಅವರ ಸಮಯ ನಿಗದಿ ಮಾಡಿದ ನಂತರ ನಾನು ಪ್ರವಾಸ ಮಾಡುತ್ತೇನೆ” ಎಂದು ತಿಳಿಸಿದರು.
ನಿಗಮ ಮಂಡಳಿ ನೇಮಕ ಬಗ್ಗೆ ಕೇಳಿದಾಗ, “ಅದನ್ನು ಶೀಘ್ರದಲ್ಲೇ ಮಾಡುತ್ತೇವೆ. ಈಗಾಗಲೇ ಗ್ಯಾರಂಟಿ ಸಮಿತಿಯಲ್ಲಿ 4 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. 8 ಸಾವಿರ ಜನ ಕಾರ್ಯಕರ್ತರನ್ನು ಬೇರೆ ಬೇರೆ ಸಮಿತಿ ಸದಸ್ಯರನ್ನಾಗಿ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ 500-600 ಜನಕ್ಕೆ ಮಾಡಬೇಕಿದೆ. ಈ ಪಟ್ಟಿ ಸಿದ್ಧವಾಗಿದ್ದು, ಸ್ಥಳೀಯ ನಾಯಕರ ಜತೆ ಚರ್ಚಿಸಿ ಪ್ರಕಟಿಸುತ್ತೇವೆ” ಎಂದು ತಿಳಿಸಿದರು.