ಬೀದರ್ ನಗರದ ರಾಂಪೂರೆ ಬ್ಯಾಂಕ್ ಕಾಲೋನಿಯಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಫೆ.2ರಂದು ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಆಯ್ಕೆಯಾದ ಮೊದಲ 25 ವಿದ್ಯಾರ್ಥಿಗಳಿಗೆ 2 ವರ್ಷ ಉಚಿತ ಪಿಯು ಶಿಕ್ಷಣ ಮತ್ತು ಸ್ಪರ್ಧಾತ್ಮಕ ತರಬೇತಿ ನೀಡಲಾಗುವುದು. ನಂತರ ಕ್ರಮವಾಗಿ 26 ರಿಂದ 50 ವಿದ್ಯಾರ್ಥಿಗಳಿಗೆ ಕಾಲೇಜಿನ ಶುಲ್ಕದಲ್ಲಿ ಅರ್ಧದಷ್ಟು ರಿಯಾಯತಿ ನೀಡಲಾಗುವುದು’ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದರು.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾಳೆ ಬೆಳಿಗ್ಗೆ 9 ಗಂಟೆಗೆ ಸ್ಕಾಲರ್ಶಿಪ್ ಪ್ರವೇಶ ನಡೆಯಲಿದ್ದು, ಈಗಾಗಲೇ ಜಿಲ್ಲೆಯ ವಿವಿಧ ಕಡೆಗಳಿಂದ 1200ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ’ ಎಂದು ಮಾಹಿತಿ ನೀಡಿದರು.
‘ಗಡಿ ಜಿಲ್ಲೆ ಬೀದರ್ ಅನ್ನು ಶೈಕ್ಷಣಿಕವಾಗಿ ರಾಜ್ಯ ರಾಷ್ಟ್ರಮಟ್ಟದಲ್ಲಿ ನಂಬರ್ ಒನ್ ಸ್ಥಾನಕ್ಕೇರಿಸುವ ಇರಾದೆ ತಮ್ಮದ್ದಾಗಿದೆ. ಈಗಾಗಲೇ ಕಳೆದ ಸಾಲಿನ ನೀಟ್ನಲ್ಲಿ ಬೀದರ್ ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನಕ್ಕೇರಿರುವುದು ಹೆಮ್ಮೆ ತರಿಸಿದೆ’ ಎಂದರು.
‘ಬೀದರ್ ಅನ್ನು ಶೈಕ್ಷಣಿಕ ಕ್ಷೇತ್ರವನ್ನಾಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಹಲವು ವರ್ಷಗಳಿಂದ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಮೂಲಕ ಪ್ರತಿಭಾವಂತ 100 ಮಕ್ಕಳಿಗೆ ಪ್ರತಿವರ್ಷ ಉಚಿತ ಶಿಕ್ಷಣ ಕಲ್ಪಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
‘ಬೀದರ್ ನಗರದಲ್ಲಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಗುಣಾತ್ಮಕ ಶಿಕ್ಷಣ ಕಲ್ಪಿಸಲಾಗುವುದು. ಇದರ ಸದುಪಯೋಗ ಜಿಲ್ಲೆಯ ಪಾಲಕರು ಪಡೆದುಕೊಂಡು ಹೆಚ್ಚಿನ ವಿದ್ಯಾರ್ಥಿಗಳನ್ನು ದಾಖಲು ಮಾಡಬೇಕು’ ಎಂದು ತಿಳಿಸಿದರು.
ಬೀದರ್ ನಗರದಲ್ಲಿ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಮಾದರಿಯಲ್ಲಿಯೇ ಶಿಕ್ಷಣ ಸೌಲಭ್ಯ ಒದಗಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಲೋಕೇಶ ಉಡಬಾಳೆ 9738451506ಗೆ ಸಂಪರ್ಕಿಸಬಹುದಾಗಿ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನ ರೆಡ್ಡಿ ಇದ್ದರು.