ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೇ, ಶಿಕ್ಷಣದಿಂದ ವಂಚಿತರಾಗುವಂತೆ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ ಬೀದರ್ನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
“ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡು, ರಾಜ್ಯದ ಅದೆಷ್ಟೋ ಬಡ ವಿದ್ಯಾರ್ಥಿಗಳು ಸರಕಾರ ನೆರವಿಗೆ ಧಾವಿಸುತ್ತದೆ. ಹಲವಾರು ವಿದ್ಯಾರ್ಥಿಗಳು ಸರ್ಕಾರ ನಮಗೆ ಆರ್ಥಿಕ ಬೆಂಬಲವನ್ನು ವಿದ್ಯಾರ್ಥಿ ವೇತನದ ರೂಪದಲ್ಲಿ ನೀಡುತ್ತದೆ ಎಂದು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡಬೇಕಾದ ಪ್ರಾಮುಖ್ಯತೆ ನೀಡದೇ ಇರುವುದು ದೌರ್ಭಾಗ್ಯವಾಗಿದೆ. ವಿದ್ಯಾರ್ಥಿ ವೇತನದಲ್ಲೂ ಸರ್ಕಾರ ರಾಜಕೀಯ ಮುಂದುವರೆಸುತ್ತಿರುವ ಕಾರಣ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ” ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.
“ಎಸ್.ಎಸ್.ಪಿ., ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಸೂಕ್ತ ಸಮಯಕ್ಕೆ ವಿದ್ಯಾರ್ಥಿ ವೇತನ ನೀಡದೇ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರ ಸ್ಥಿತಿಗೆ ತರುವ ಕೆಲಸ ಮಾಡುತ್ತಿದೆ” ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಭಾಲ್ಕಿಯಲ್ಲಿ ವಕೀಲೆ ಬಂಧನ ಪ್ರಕರಣ; ಜಿಲ್ಲಾಡಳಿತ ವಿರುದ್ಧ ಕಪ್ಪು ಬಟ್ಟೆ ಧರಿಸಿ ಏಕಾಂಗಿ ಪ್ರತಿಭಟನೆ
ಈ ಸಂದರ್ಭದಲ್ಲಿಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಹೇಮಂತ, ಎಸ್.ಎಫ್.ಡಿ. ಪ್ರಮುಖರಾದ ಅಂಬ್ರೇಶ ಬಿರಾದಾರ, ಲಕ್ಷ್ಮಿಕಾಂತ, ಪವನ, ನಾಗರಾಜ, ಓಂಕಾರ, ಮಂಜುನಾಥ, ಮಹೇಶ, ಆನಂದ, ದಾವೀದ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.