ಮನರೇಗಾ ಯೋಜನೆಯಡಿ ಕೆಲಸ ಮಾಡಿರುವ ಕೃಷಿ ಕಾರ್ಮಿಕರ ಕೂಲಿ ಹಣ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಧಾರವಾಡ ನಗರದ ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಪ್ರತಿಭಟನಾ ಮೆರವಣೆಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಎಐಕೆಕೆಎಂಎಸ್ ಜಿಲ್ಲಾ ಅಧ್ಯಕ್ಷೆ ದೀಪಾ ಧಾರವಾಡ ಮಾತನಾಡಿ, ʼಕಳೆದ 22 ವರ್ಷಗಳಲ್ಲೇ ಈ ಬಾರಿ ಅತ್ಯಂತ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಆದರೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರೈತರ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡಲಿಲ್ಲ. ಸಾಲದಲ್ಲೇ ಮುಳುಗಿ ಕೃಷಿ ಚಟುವಟಿಕೆ ನಡೆಸುವ ರೈತರ ಬದುಕು ಮತ್ತಷ್ಟು ಅಧೋಗತಿಗೆ ತಲುಪಿದೆ. ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೆ ರೈತ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದ್ದಾನೆʼ ಎಂದು ಕಳವಳ ವ್ಯಕ್ತಪಡಿಸಿದರು.
ʼರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,185 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಧಾರವಾಡ ಜಿಲ್ಲೆಯ 104ಕ್ಕೂ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದಾಖಲಾಗಿದೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ರೈತರ ಆತ್ಮಹತ್ಯೆ ತಡೆಗಟ್ಟಲು ಸೂಕ್ತ ಕಾರ್ಯಕ್ರಮ ಜಾರಿಗೊಳಿಸಬೇಕುʼ ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ ಮಾತನಾಡಿ, ʼವಿದ್ಯುತ್ ಕಾಯ್ದೆ ರೈತರ ತಲೆಯ ಮೇಲೆ ತೂಗುಗತ್ತಿಯಂತೆ ನಿಂತಿದೆ. ರೈತರ ಬಾವಿ, ಬೋರ್ವೆಲ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಕೆ, ಮನೆಗಳಿಗೆ ವಿದ್ಯುತ್ ಪ್ರಿಪೇಡ್ ವ್ಯವಸ್ಥೆ ಜಾರಿಗೊಳಿಸಲು ಕಾತುರದಿಂದ ಕಾಯುತ್ತಿದೆ. ಸರ್ಕಾರದ ಇಂತಹ ನೀತಿಗಳಿಂದ ರೈತನ ಬದುಕು ಭಯದಲ್ಲೇ ಮುಳುಗಿಸಿದೆ. ಸತತ ಮಳೆಯಿಂದಾಗಿ ಯಾವ ಕೆಲಸ ಸಿಗದೇ ಹೊಟ್ಟೆ ತುಂಬಿಸಿಕೊಳ್ಳುವುದು ಕಷ್ಟಕರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಳೆದ ಎರಡು ತಿಂಗಳ ನರೇಗಾ ಕೂಲಿ ಹಣ ಬಾಕಿ ಉಳಿಸಿಕೊಂಡಿದೆ. ಕೂಡಲೇ ನರೇಗಾ ಕಾರ್ಮಿಕರ ಕೂಲಿ ಹಣ ಬಿಡುಗಡೆ ಮಾಡಬೇಕುʼ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಪಿಎಸ್ಐ ಸಾವು ಪ್ರಕರಣ : ಯಾದಗಿರಿಗೆ ಆಗಮಿಸಿದ ಸಿಐಡಿ ತಂಡ
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಹನುಮೇಶ ಹುಡೇದ, ಜಂಟಿ ಕಾರ್ಯದರ್ಶಿ ಮಾರುತಿ ಪೂಜಾರ, ಜಗದೀಶ ಪೂಜಾರ್, ಜಿಲ್ಲಾ ಸಮಿತಿ ಸದಸ್ಯರಾದ ಗಿರಿಯಪ್ಪ ಪೂಜಾರ, ಬಸಪ್ಪ ಕರಿಕಟ್ಟೆ, ಮಡಿವಾಳಪ್ಪ, ನಗೀನಾ, ಸಲೀಂ, ನಾಗಪ್ಪ, ಮಂಜಳಾ ಜಗದಾಳೆ , ಗೋವಿಂದ ಕೃಷ್ಣಪ್ಪ ಸೇರಿದಂತೆ ಮುಂತಾದವರಿದ್ದರು.