ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.
ಸಿಐಟಿಯು ಪ್ರಧಾನ ಕಾರ್ಯದರ್ಶಿ ಬಸವಲಿಂಗಮ್ಮ ನಾಟೇಕರ್ ಮಾತನಾಡಿ, ʼಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಅಂಗನವಾಡಿಗಳಲ್ಲಿ ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ಗ್ರಾಜ್ಯುಟಿ ಅನುದಾನದ ಬಿಡುಗಡೆ, ಅನುದಾನ ಹೆಚ್ಚಳ, ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂಗೊಳಿಸಬೇಕು. 2018ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡದೇ ಇರುವುದರಿಂದ ಕೂಡಲೇ ₹26 ಸಾವಿರ ಗೌರವಧನ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ₹15 ಸಾವಿರ ಗೌರವಧನ ಹೆಚ್ಚಿಸಬೇಕುʼ ಎಂದು ಆಗ್ರಹಿಸಿದರು.
ನಿವೃತ್ತಿಯಾದವರಿಗೆ ಇಡಿಗಂಟು ₹10 ಸಾವಿರ ಮಾಸಿಕ ಪಿಂಚಣಿ, ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್ಕೆಜಿ ಯುಕೆಜಿ ಪ್ರಾರಂಭಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡುವುದು ಸೇರಿದಂತೆ 20 ಬೇಡಿಕೆ ಈಡೇರಿಕೆಗೆ ಪ್ರತಿಭಟನಾ ನಿರತ ಕಾರ್ಯಕರ್ತರು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆ ಮುಂದುವರಿಕೆ ಸಾಧ್ಯತೆ
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಅನೀತಾ ಹಿರೇಮಠ, ಖಜಾಂಚಿ ಬಸಮ್ಮ ಸೇರಿದಂತೆ ಸಿಪಿಐ(ಎಂ) ಮುಖಂಡರಾದ ಚನ್ನಪ್ಪ ಆನೆಗುಂದಿ, ದವಲಸಾಬ್ ನದಾಫ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.