- 2022-23ನೇ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದವರಿಗೆ ಮಾತ್ರ ನಿರುದ್ಯೋಗ ಭತ್ಯೆ
- ಎರಡು ವರ್ಷಗಳ ಅವಧಿಗೆ ಮಾತ್ರ ನೀಡುವುದಾಗಿ ಷರತ್ತು ವಿಧಿಸಿದ ಕಾಂಗ್ರೆಸ್ ಸರ್ಕಾರ
ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಸರ್ಕಾರವೇ ನಿಗದಿಪಡಿಸಿರುವ ವಯೋಮಿತಿಯಲ್ಲಿರುವ ಎಲ್ಲ ನಿರುದ್ಯೋಗಿಗಳಿಗೂ ನಿರುದ್ಯೋಗ ಭತ್ಯೆಯನ್ನು ಅವರಿಗೆ ಉದ್ಯೋಗ ದೊರಕುವವರೆಗೂ ನೀಡಬೇಕು ಎಂದು ಎಐಡಿಎಸ್ಒ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ದಾಳ್ ಆಗ್ರಹಿಸಿದ್ದಾರೆ.
“ಕಾಂಗ್ರೆಸ್ ಸರ್ಕಾರವು ತಾನು ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮೊದಲ ಮಂತ್ರಿಮಂಡಲದ ಸಭೆಯಲ್ಲಿಯೇ ತೀರ್ಮಾನಿಸಿ ಷರತ್ತುಬದ್ಧ ಆದೇಶ ಹೊರಡಿಸಿದೆ. ಈ ಮೂಲಕ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಪದವಿ ಮತ್ತು ಡಿಪ್ಲೋಮಾ ಮುಗಿಸಿರುವ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’ ಯೋಜನೆಯ ಪ್ರಕಾರ, 2022-23ನೇ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಮಾತ್ರ ನಿರುದ್ಯೋಗ ಭತ್ಯೆಯನ್ನು, ಅದೂ ಎರಡು ವರ್ಷಗಳ ಅವಧಿಗೆ ಮಾತ್ರ ನೀಡಲಾಗುವುದು ಎಂಬ ಷರತ್ತು ವಿಧಿಸಲಾಗಿದೆ. ಹಾಗಾದರೆ ಈ ಅವಧಿಗೆ ಮುನ್ನ ಪದವಿ, ಡಿಪ್ಲೋಮಾ, ಇನ್ನಿತರ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿ ಉದ್ಯೋಗಕ್ಕಾಗಿ ಹಗಲಿರುಳು ಶ್ರಮಿಸುತ್ತ, ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಯುವಜನರು ನಿರುದ್ಯೋಗಿಗಳಲ್ಲವೇ” ಎಂದು ಪ್ರಶ್ನಿಸಿದ್ದಾರೆ
“ನಿಜವಾಗಿಯೂ ನಿರುದ್ಯೋಗದ ಬಿಸಿ ತಟ್ಟುತ್ತಿರುವುದು ಹತ್ತಾರು ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನರಿಗೆ, ಅವರನ್ನು ನಿರುದ್ಯೋಗಿಗಳೆಂದು ಗುರುತಿಸಿ ನಿರುದ್ಯೋಗ ಭತ್ಯೆ ನೀಡಬೇಕಾಗಿರುವುದು ಅತ್ಯವಶ್ಯಕ” ಎಂದು ಅಭಿಪ್ರಾಯಪಟ್ಟಿದ್ದಾರೆ.
“ಚುನಾವಣೆಗೂ ಮುನ್ನ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದು ಕಾಂಗ್ರೆಸ್ ನೀಡಿದ್ದ ಭರವಸೆಯನ್ನು ನಂಬಿಕೊಂಡು, ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಈಗಲಾದರೂ ಒಂದು ರಾಜಕೀಯ ಪಕ್ಷ ಅಧಿಕೃತವಾಗಿ ಒಪ್ಪಿಕೊಂಡಿದೆ ಎಂಬ ಆಶಾಭಾವನೆಯೊಂದಿಗೆ ರಾಜ್ಯದ ಬಹುತೇಕ ಯುವಜನರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇಂತಹ ಯುವಸಮುದಾಯದ ನಿರೀಕ್ಷೆಯನ್ನು ಹುಸಿಗೊಳಿಸಿ ಕೇವಲ 2022-23ನೇ ಸಾಲಿನಲ್ಲಿ ತೇರ್ಗಡೆಯಾದವರಿಗೆ ಮಾತ್ರ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂಬುದು ಎಷ್ಟು ಸರಿ” ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಶಾಸಕ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಪ್ರಮೋದ್ ಮುತಾಲಿಕ್
“ಎಲ್ಲ ಯುವಕರು ತಮ್ಮ ಮೊದಲ ಆದ್ಯತೆಯಾಗಿ ಕೇಳುತ್ತಿರುವುದು ಉದ್ಯೋಗವನ್ನೇ ಹೊರತು ನಿರುದ್ಯೋಗ ಭತ್ಯೆಯನ್ನಲ್ಲ. ಆದರೆ, ಅವರ ಯೋಗ್ಯತೆಗೆ ತಕ್ಕದಾದ ಉದ್ಯೋಗವನ್ನು ಒದಗಿಸಲಾಗದ ಸರ್ಕಾರ, ಅವರು ಆತ್ಮ ಗೌರವದಿಂದ ಬದುಕಲು ಬೇಕಾದ ನಿರುದ್ಯೋಗ ಭತ್ಯೆಯನ್ನು ಕೊಡಬೇಕಾಗಿರುವುದು ಒಂದು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿನ ಚುನಾಯಿತ ಸರ್ಕಾರವೊಂದರ ಕನಿಷ್ಠ ಜವಾಬ್ದಾರಿ” ಎಂದಿದ್ದಾರೆ.
“ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಸರ್ಕಾರವೇ ನಿಗದಿಪಡಿಸಿರುವ ವಯೋಮಿತಿಯಲ್ಲಿರುವ ಎಲ್ಲ ನಿರುದ್ಯೋಗಿಗಳಿಗೂ ನಿರುದ್ಯೋಗ ಭತ್ಯೆಯನ್ನು ಅವರಿಗೆ ಉದ್ಯೋಗ ದೊರಕುವವರೆಗೂ ನೀಡಬೇಕು ಎಂದು ಎಐಡಿವೈಓ ರಾಜ್ಯ ಸಮಿತಿಯು ಒಕ್ಕೊರಲಿನಿಂದ ಆಗ್ರಹಿಸುತ್ತದೆ” ಎಂದು ತಿಳಿಸಿದ್ದಾರೆ.