ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆ ಮತ್ತು ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಹೇರಳ ಅನುದಾನ ನೀಡುತ್ತಿವೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿಗಳನ್ನು ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.
ಇನ್ನೂ ಕೆಲವುಕಡೆ ಕಟ್ಟಡ ನಿರ್ಮಾಣಕ್ಕೆ ಜಾಗವೇ ಸಿಗದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 1,771 ಅಂಗನವಾಡಿ ಕೇಂದ್ರಗಳಿವೆ. ಅವುಗಳ ಪೈಕಿ 1,145 ಕೇಂದ್ರಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದ 414 ಕೇಂದ್ರಗಳಲ್ಲಿ ಕೆಲವು ಬಾಡಿಗೆ ಕಟ್ಟಡದಲ್ಲಿ, ಉಚಿತ ಕಟ್ಟಡ, ಸಮುದಾಯ ಭವನ, ಶಾಲೆಗಳಲ್ಲಿ ಅಂಗನವಾಡಿ ನಡೆಯುತ್ತವೆ. ಕಟ್ಟಡ ನಿರ್ಮಾಣಕ್ಕೆ ಕೇಂದ್ರ- ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಸಾಕಷ್ಟು ಅನುದಾನ ಬರುತ್ತದೆ. ಆದರೆ, ನಿವೇಶನ ಸಿಗದೆ ಅನುದಾನ ಬಳಸಲು ಸಾಧ್ಯವಾಗದ ಪರಿಸ್ಥಿತಿಯಿದೆ.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬಡ ಹಾಗೂ ಪುಟ್ಟ ಮಕ್ಕಳು ತೊಂದರೆ ಎದುರಿಸುವಂತಾಗಿದೆ. ಅಂಗನವಾಡಿ ಕೇಂದ್ರಗಳಿಗೆ ಜಾಗವನ್ನು ಆಯಾ ಸ್ಥಳೀಯ ಸಂಸ್ಥೆಗಳು ಸಭೆಯಲ್ಲಿ ಠರಾವು ಪಾಸ್ ಮಾಡಿ ನೀಡಬೇಕು. ಆದರೆ, ಈ ಬಗ್ಗೆ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಆಸಕ್ತಿ ತೋರಿಸುತ್ತಿಲ್ಲ. ಪರಿಣಾಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗುರುತಿಸಿದ ಜಾಗವನ್ನೂ ಸ್ಥಳೀಯ ಆಡಳಿತಗಳು ನೀಡುತ್ತಿಲ್ಲ. ಈ ವಿಚಾರದಲ್ಲಿ ಸ್ಥಳೀಯ ಜನಪತ್ರಿನಿಧಿಗಳು ರಾಜಕೀಯ ಮಾಡುತ್ತಿದ್ದು ಸಮಸ್ಯೆಗೆ ಪರಿಹಾರವೇ ಸಿಗದಾಗಿದೆ. ಈ ಬಗ್ಗೆ ಶಾಸಕ, ಸಂಸದರು ಸರಿಯಾದ ಒಂದು ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರ ಆರೋಪಿಸುತ್ತಿದ್ದಾರೆ.
ರಂಗಮಂದಿರ, ಗ್ರಾಮಗಳಲ್ಲಿನ ದೇವಸ್ಥಾನದಲ್ಲಿ ಅಂಗನವಾಡಿ ನಡೆಸುತ್ತಿದ್ದಾರೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸುಸಜ್ಜಿತ ಅಂಗನವಾಡಿ ಕೇಂದ್ರಗಳು ಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಬೇಕು. ಬಾಡಿಗೆ ಕಟ್ಟಡಗಳಲ್ಲಿರುವ ಕೇಂದ್ರಗಳಿಗೆ ಸ್ವಂತ ಕಟ್ಟಡ ಹೊಂದಲು ಸ್ಥಳೀಯ ಸಂಸ್ಥೆಗಳು ನಿವೇಶನ ನೀಡಲು ಮುಂದಾಗಬೇಕು. ಅಧಿಕಾರಿಗಳು ಕೂಡ ಸ್ಥಳೀಯ ಸಂಸ್ಥೆಗಳ ಮೇಲೆ ಒತ್ತಡ ಹೇರಬೇಕು ಎನ್ನುತ್ತಾರೆ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಫೆಡರೇಷನ್ ನ ರಾಜ್ಯ ಸಂಚಾಲಕ ಅವರಗೆರೆ ವಾಸು.
ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟದಲ್ಲಿ ನಡೆಯುತ್ತಿವೆ. ಐದು ತಿಂಗಳಿಂದ ಬಾಡಿಗೆ ಹಣ ಬಂದಿಲ್ಲ. ಕಾರ್ಯಕರ್ತೆಯರಿಗೆ ಎರಡು ತಿಂಗಳಿಂದ ಗೌರವಧನ ಸಿಕ್ಕಿಲ್ಲ ಎಂದು ದೂರುತ್ತಾರೆ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಫೆಡರೇಷನ್ನ ಎಸ್.ಎಸ್ ಮಲ್ಲಮ್ಮ.
ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲೆಯಲ್ಲಿ 414 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. 90ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಹಂತದಲ್ಲಿವೆ. ಇನ್ನು 72 ನಿವೇಶನಗಳು ಇದ್ದು, ಉಳಿದವುಗಳಿಗೆ ನಿವೇಶನ ಗುರುತಿಸಿ ಕಟ್ಟಡ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.