ಏಪ್ರಿಲ್ 1ರ ವಿಶೇಷತೆ ಎಲ್ಲರಿಗೂ ಗೊತ್ತಿರುವ ವಿಚಾರ, ಮೂರ್ಖರ ದಿನ ಎಂದೇ ಕರೆಯಲಾಗುತ್ತದೆ. ಅದರೆ ಇದರ ಹಿಂದಿನ ಉದ್ದೇಶ ಬೇರೆಯೇ ಇದೆ. ಆದರೆ ನಾಳೆ ಉಡುಪಿ ಜಿಲ್ಲೆಯಲ್ಲಿ ಮೂರ್ಖರ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲು ಇಲ್ಲಿನ ನಾಗರಿಕರು ಮುಂದಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಹಲವು ವರ್ಷಗಳಿಂದ ರಸ್ತೆ ಹಾಳಾಗಿ ಜನರು ಕಷ್ಟವನ್ನು ಅನುಭವಿಸುತ್ತಿದ್ದರೂ ಕೂಡ ಅಧಿಕಾರಿಗಳು ಜನಪ್ರತಿನಿಧಿಗಳು ಕ್ಯಾರೇ ಎನ್ನುತ್ತಿಲ್ಲ.
“ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಜನವರಿ 10ರಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ಎಂಜಿನಿಯರ್ಗಳಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಡಳಿತ ಈ ಹಿಂದೆಯೇ ಸೂಚನೆ ನೀಡಿತ್ತು. ಆದರೆ ಈವರೆಗೆ ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ, ಸಂಸದರು ಸ್ಥಳಕ್ಕೆ ಭೇಟಿ ನೀಡಿ ಮನಬಂದಂತೆ ಕಾಮಗಾರಿಯ ಕೊನೆ ದಿನ ನಿಗದಿಪಡಿಸಿ ಹೋಗುತ್ತಾರೆ. ಇದೂ ಕೂಡ ಅವರಿಗೆ ರೂಢಿಯಾಗಿ ಹೋಗಿದೆ. ಆದರೆ ಇಲ್ಲಿನ ಸಾರ್ವಜನಿಕರು ಮಾತ್ರ ಮುರ್ಖರಾಗುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ ಸೇತುವೆ ಲೋಕಾರ್ಪಣೆಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿ ಏಪ್ರಿಲ್ 1ರ ಮಧ್ಯಾಹ್ನ ಕಲ್ಸಂಕ ವೃತ್ತದಿಂದ ಇಂದ್ರಾಳಿಯ ನಿರ್ಮಾಣ ಹಂತದಲ್ಲಿರುವ ಸೇತುವೆ ತನಕ ಬೃಹತ್ ಪ್ರತಿಭಟನಾ ಜಾಥಾ ಮತ್ತು ಪ್ರತಿಭಟನಾ ಸಭೆ ನಡೆಸಲಾಗುವುದು” ಎಂದು ಸಂಘಟಕರು ತಿಳಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿದ ಹೋರಾಟ ಸಮಿತಿಯ ಸಂಚಾಲಕ ಅಮೃತ್ ಶೆಣೈ, “ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪೂರ್ಣಗೊಳ್ಳದೇ ಇಲ್ಲಿ ನಿತ್ಯವೂ ಅಪಘಾತಗಳು, ಗಂಭೀರ ಗಾಯ, ಜೀವಹಾನಿಗಳಾಗಿವೆ. ಕಳೆದ 9 ವರ್ಷದಿಂದ ಸರ್ಕಾರ, ಸಂಸದರು, ಗುತ್ತಿಗೆದಾರರು, ಅಧಿಕಾರಿಗಳು ಈ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸದೇ ಪದೇ ಪದೆ ಗಡುವು ನೀಡಿ, ಸುಳ್ಳುಹೇಳಿ ಉಡುಪಿಯ ಜನತೆಯನ್ನು ಮೂರ್ಖರನ್ನಾಗಿ ಮಾಡಿದ್ದಾರೆ. ಆದ್ದರಿಂದ ಏ.1ರಂದು ಮೂರ್ಖರ ದಿನದಂತೆ ಈ ವಿಶಿಷ್ಟಮಯ ಪ್ರತಿಭಟನೆಯನ್ನು ನಡೆಸಲಾಗುತ್ತದೆ. ಕಾಮಗಾರಿ ಪೂರ್ಣಗೊಂಡು ಜನವಾಹನ ಸಂಚಾರ ಸುಗಮವಾಗುವವರೆಗೂ ಈ ಹೋರಾಟ ನಡೆಯಲಿದೆ” ಎಂದು ಹೇಳಿದರು.

ಹೋರಾಟ ಸಮಿತಿಯ ಅಧ್ಯಕ್ಷ ಕೀರ್ತಿ ಶೆಟ್ಟಿ ಮಾತನಾಡಿ, “ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಗರದ ಕಲ್ಸಂಕ ವೃತ್ತದಿಂದ ಇಂದ್ರಾಳಿ ರೈಲ್ವೆ ಸೇತುವೆವರೆಗೆ ಬೃಹತ್ ಪಾದಯಾತ್ರೆ ನಡೆಸಲಾಗುತ್ತದೆ. ಅದರಲ್ಲಿ ಸುಮಾರು 5 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಮೆರವಣಿಗೆಯಲ್ಲಿ ಉದ್ದೇಶಿತ ರೈಲ್ವೆ ಮೇಲ್ಸೇತುವೆಯ ಬೃಹತ್ ಪ್ರತಿಕೃತಿಯ ಸ್ತಬ್ಧಚಿತ್ರ ವಿಶೇಷವಾಗಿರುತ್ತದೆ. ಜತೆಗೆ ಈ ಯೋಜನೆಯನ್ನು ಪೂರ್ಣಗೊಳಿಸಲು ಹಣದ ಕೊರತೆಯನ್ನು ನೀಗಿಸಲು ಪ್ರತಿಭಟನಾಕಾರರು ಸಾರ್ವಜನಿಕರಿಂದ ಭಿಕ್ಷೆ ಬೇಡಿ, ಶೂ ಪಾಲಿಶ್ ಮಾಡಿ ಸಂಗ್ರಹವಾದ ಹಣವನ್ನು ಜಿಲ್ಲಾಡಳಿತಕ್ಕೆ ನೀಡಲಾಗುತ್ತದೆ” ಎಂದರು.

ಒಟ್ಟಿನಲ್ಲಿ ನಿರಂತರ ಪ್ರತಿಭಟನೆ, ಮನವಿ ನೀಡಿದರೂ, ರೈಲ್ವೆ ಸೇತುವೆ ಮಾತ್ರ ನಿಧಾನಗತಿಯಲ್ಲೇ ಸಾಗುತ್ತಿದೆ. ಈ ಪ್ರತಿಭಟನೆಯಿಂದಾದರೂ ಜನಪ್ರತಿನಿಧಿಗಳು ಎಚ್ಚೆತ್ತು ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನೆರವಾಗುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ.

