- ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸೌಭಾಗ್ಯ ನಗರ ನಿವಾಸಿಗಳು
- ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿದ ತುಮಕೂರು ಭಾಗದ ನಿವಾಸಿಗಳು
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಆಯೋಗವು ರಾಜ್ಯದಲ್ಲಿ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ. ಆದರೆ, ಬಹುತೇಕ ಕಡೆ ಮತದಾರರು ಸೌಕರ್ಯಗಳಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರದ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.
ಅದರಂತೆಯೇ ಜನರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ವಿಜಯಪುರ, ಶಿವಮೊಗ್ಗ ಹಾಗೂ ತುಮಕೂರಿನ ಕೆಲವು ಗ್ರಾಮಗಳ ಜನರು ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಚುನಾವಣೆ ಬಹಿಷ್ಕರಿಸುವ ಪೋಸ್ಟರ್ ಅಂಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯಪುರ
ವಿಜಯಪುರ ನಗರದ ಶಿವಗಿರಿ ರಸ್ತೆಯ ಸೌಭಾಗ್ಯ ನಗರ ನಿವಾಸಿಗಳು ಪೋಸ್ಟರ್ ಅಂಟಿಸಿ ಮತದಾನ ಬಹಿಷ್ಕಾರ ಮಾಡಿದ್ದು, “ನಗರದಲ್ಲಿ ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪ, ಒಳಚರಂಡಿ, ಕಾಂಗ್ರೀಟ್ ರಸ್ತೆ ಸಮಸ್ಯೆ ಎದುರಿಸಲಾಗುತ್ತಿದೆ. ಈ ಹಿನ್ನೆಲೆ ಮತದಾನ ಬಹಿಷ್ಕಾರ ಮಾಡಲಾಗುತ್ತಿದೆ” ಎಂದು ಸ್ಥಳೀಯ ನಿವಾಸಿಗಳು ಪೋಸ್ಟರ್ ಅಂಟಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.
“ಕೆಲವೇ ದಿನಗಳಲ್ಲಿ ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲಿದ್ದೇವೆ. ಬೀದಿ ದೀಪಗಳನ್ನು ಅಳವಡಿಸಿ ಕೊಡುತ್ತೇವೆ. ಯಾರೂ ಮತದಾನ ಬಹಿಷ್ಕರಿಸದೆ ಕಡ್ಡಾಯವಾಗಿ ಮತದಾನ ಮಾಡಿ” ಎಂದು ಸ್ಥಳೀಯರಲ್ಲಿ ಮನವಿ ಮಾಡಿದರು.
ತುಮಕೂರು
ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರಕ್ಕೆ ಸೇರುವ ಗ್ರಾಮಸ್ಥರು ಜನರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತುಮಕೂರು ತಾಲೂಕಿನ ಚಿನ್ನವಾರನಹಳ್ಳಿ ಗ್ರಾಮ ಸೇರಿ 13 ಗ್ರಾಮಸ್ಥರು ಜನರು ಸಾಮೂಹಿಕವಾಗಿ ಮತದಾನ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಡಾ.ಜಿ.ಪರಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿದ್ದು, ಮತದಾನ ಬಹಿಷ್ಕರಿಸದಂತೆ ಗ್ರಾಮಸ್ಥರ ಮನವೊಲಿಸಲು ಮುಂದಾಗಿದ್ದಾರೆ. ಈ ವೇಳೆ ಕೂಡಲೇ ಗಣಿಗಾರಿಕೆಗೆ ನೀಡಿರುವ ಪರವಾನಗಿ ಹಿಂಪಡೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಡಾ. ಜಿ ಪರಮೇಶ್ವರ್ ಅವರು ಚಿನಿವಾರನಹಳ್ಳಿಗೆ ಭೇಟಿ ನೀಡಿ, ತುಮಕೂರು ಜಿಲ್ಲಾಧಿಕಾರಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಗಣಿಗಾರಿಕೆಗೆ ನೀಡಿರುವ ಅನುಮತಿ ರದ್ದುಗೊಳಿಸುವಂತೆ ಸೂಚನೆ ನೀಡಿದ್ದಾರೆ.
“ಗಣಿಗಾರಿಕೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ನಾನು ಬಿಡುವುದಿಲ್ಲ, ನಾನು ನಿಮ್ಮೊಂದಿಗೆ ಇದ್ದೇನೆ” ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು.
ರಾಮನಗರ
ರಾಮನಗರ ತಾಲೂಕಿನ ರಾಂಪುರದೊಡ್ಡಿ ಗ್ರಾಮದ ಬಳಿ ಸ್ಥಳೀಯರು ಪ್ರತಿಭಟನೆ ಮಾಡಿದರು. ರಾಂಪುರ ದೊಡ್ಡಿ, ಗೋಪಾಲಪುರ, ಇರುಳಿಗದೊಡ್ಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸರಿಪಡಿಸದಿದ್ದರೆ ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ.
ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಓಡಾಡಲು ತೊಂದರೆಯಾಗುತ್ತಿದೆ. ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮೂರು ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಸ್ತೆ ಸರಿಪಡಿಸುವ ಭರವಸೆ ನೀಡಿದವರಿಗಷ್ಟೇ ಈ ಬಾರಿ ಮತ ಹಾಕುತ್ತೇವೆ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ
ಶಿವಮೊಗ್ಗದ ಹಲವು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರದ ಅಸ್ತ್ರ ಪ್ರಯೋಗ ಮುಂದುವರಿದಿದೆ. ಶಿವಮೊಗದ ಸಾಗರ ತಾಲೂಕಿನ ಶಾನ್ ಭೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿದೆ.
ಅರಣ್ಯ ಇಲಾಖೆಯ ಧೋರಣೆ ಖಂಡಿಸಿ ಶಾನ್ ಭೋಗ್ ಗ್ರಾಮ ಪಂಚಾಯಿತಿಯ ಮರಾಠಿ, ಮುರಳ್ಳಿ, ಕೋಡಾನಹಳ್ಳಿ, ಹಾಳಸಸಿ, ಹಾಳಗಳಲೆ ಗ್ರಾಮಗಳ ಜನರು ಚುನಾವಣೆ ಬಹಿಷ್ಕಾರ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ವಿಧಾನಸಭೆ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸುಳ್ಳು ಆಮಂತ್ರಣ ಪತ್ರಿಕೆ ಮುದ್ರಣ
“ಅರಣ್ಯ ಇಲಾಖೆಯು ಈ ಭಾಗದ ಜಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದೆ. ಪಹಣಿಯಲ್ಲಿ ಕಂದಾಯ ಗ್ರಾಮ ಎಂದು ಘೋಷಿಸದೆ ಅಭಯಾರಣ್ಯ ಎಂದು ಉಲ್ಲೇಖ ಮಾಡಿದೆ. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅರಣ್ಯ ಇಲಾಖೆಯ ಈ ನಿರ್ಧಾರ ಸರಿಯಲ್ಲ. ಕೂಡಲೇ ಪರಿಸರ ಸೂಕ್ಷ್ಮ ಪ್ರದೇಶವೆಂಬ ಪಟ್ಟಿಯಿಂದ ಕೈ ಬಿಡಬೇಕು” ಎಂದು ಆಗ್ರಹಿಸಿದ್ದಾರೆ.