ಕಳೆದೊಂದು ವಾರದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಧಾರಕಾರ ಮಳೆಸುರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಅವಾಂತರ ಸೃಷ್ಟಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಎರಡು ಕಾರುಗಳು ಕಾಲುವೆಯಲ್ಲಿ ಕೊಚ್ಚಿಹೋಗಿವೆ.
ದೇವನಹಳ್ಳಿಯಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ನಾಗರ್ಜುನಾ ಕಾಲೇಜು ಬಳಿಯ ಕಾಲುವೆ ತುಂಬಿ ಹರಿಯುತ್ತಿದೆ. ಕಾಲುವೆ ದಂಡೆಯಲ್ಲಿ ತೆರಳುತ್ತಿದ್ದ ಎರಡು ಕಾರುಗಳು ಮಳೆ ನೀರಿನ ರಭಸಕ್ಕೆ ಕಾಲುವೆಗೆ ಉರುಳಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಲೂಕಿನ ಹುರಳಗುರ್ಕಿ ಗ್ರಾಮದ 6 ಮಂದಿ ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಕ್ಷಣಾರ್ಧದಲ್ಲಿ ಕಾರಿನಿಂದ ಇಳಿದಿದ್ದು, ಪಾರಾಗಿದ್ದಾರೆ.