ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮತದಾರರ ಪಟ್ಟಿಯ ವೀಕ್ಷಕ ಕೆ.ರಾಜೇಂದ್ರ ಹೇಳಿದರು.
ಬಾಗಲಕೋಟೆ ನಗರದ ವಿದ್ಯಾಗಿರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 92ಕ್ಕೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಹಾಗೂ ವಿಶೇಷ ನೋಂದಣಿ ಅಭಿಯಾನದಡಿ ನಡೆಯುತ್ತಿರುವ ಕಾರ್ಯಗಳ ಪರಿಶೀಲನೆ ನಡೆಸಿದರು.
ಮತಗಟ್ಟೆ ಅಧಿಕಾರಿಗಳಿಂದ ನೋಂದಣಿ ಪ್ರಕ್ರಿಯೆಯ ಮಾಹಿತಿ ಪಡೆದ ಅವರು, ಹೊಸ ಮತದಾರರ ಸೇರ್ಪಡೆ, ಹೆಸರು ಮತ್ತು ವಿಳಾಸ ಸೇರಿದಂತೆ ಮತದಾರರ ವಿವರಗಳಲ್ಲಿನ ತಿದ್ದುಪಡಿ, ಸ್ಥಳಾಂತರಗೊಂಡಿರುವ ಮತದಾರರು ಹಾಗೂ ಅರ್ಹತೆ ಹೊಂದಿರದ ಮತದಾರರ ವಿವರಗಳ ಪರಿಶೀಲನೆ ಕುರಿತು ಮಾಹಿತಿ ಪಡೆದುಕೊಂಡರು.
*ಯುವ ಮತದಾರರ ನೋಂದಣಿಗೆ ಆದ್ಯತೆ
18 ವರ್ಷ ವಯಸ್ಸು ಪೂರ್ಣಗೊಳಿಸಿರುವ ಯುವಜನರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಬೇಕು. ಅರ್ಹತೆ ಹೊಂದಿರುವ ಯಾವುದೇ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಕೆ.ರಾಜೇಂದ್ರ ಸೂಚಿಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಮತದಾರರ ನೋಂದಣಿ ಪ್ರಕ್ರಿಯೆ ಯಶಸ್ವಿಯಾಗಲು ರಾಜಕೀಯ ಪಕ್ಷಗಳ ಸಹಕಾರವೂ ಪ್ರಮುಖವಾಗಿದೆ. ವಿಶೇಷವಾಗಿ ಹೊಸದಾಗಿ ಅರ್ಹತೆ ಪಡೆದ ಯುವ ಮತದಾರರಿಗೆ ನೋಂದಣಿ ಕುರಿತು ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆಗೆ ಉದ್ಯೋಗ ನಿಧಿ ಬಲ: ಕೈಗಾರಿಕೆಗಳಿಗೆ ಉತ್ತೇಜನ, ಯುವಜನರಿಗೆ ಉದ್ಯೋಗದ ನಿರೀಕ್ಷೆ
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಪಾರದರ್ಶಕತೆ, ಅರ್ಹರಿಗೆ ನೋಂದಣಿ ಅವಕಾಶ ಹಾಗೂ ನಿಯಮಬದ್ಧ ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಅವಕಾಶ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಶೀಲ್ದಾರ್ ವಾಸುದೇವ ಸ್ವಾಮಿ ಸೇರಿದಂತೆ ಅಧಿಕಾರಿಗಳು ಇದ್ದರು.




