ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಹೊರತಾಗಿಯೂ ಕಳೆದ ಎರಡು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮ ವಿರೋಧಿಸಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ನನೆಗುದಿಗೆ ಬಿದ್ದಿರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ಆರಂಭಿಸುವಂತೆ ಹಾಗೂ ನ್ಯಾಯಾಲಯದ ಆದೇಶಕ್ಕೊಳಪಟ್ಟಂತಹ ಕಂಡೀಷನಲ್ ನೇಮಕಾತಿ ಆದೇಶ ನೀಡುವಂತೆ ಸಹಾಯಕ ಪ್ರಾಧ್ಯಾಪಕರ ಬಳಗದ ರಾಜ್ಯ ನಿಯೋಗ ಮನವಿ ಮಾಡಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು 2021ರ ಅಕ್ಟೋಬರ್ನಲ್ಲಿ ಹೊರಡಿಸಿತ್ತು. 2022 ರ ಮಾರ್ಚ್ನಲ್ಲಿ ಪರೀಕ್ಷೆ ನಡೆಸಿತ್ತು. ಈ ವೇಳೆ ಭೂಗೋಳಶಾಸ್ತ್ರ ವಿಷಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಕಂಡು ಬಂದಿತ್ತು. ಈ ಕುರಿತು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಅಂತಿಮ ಆಯ್ಕೆ ಪಟ್ಟಿ ಸಲ್ಲಿಸಲಾಗಿತ್ತು” ಎಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿ ಜೈಶಂಕರ್ ತಿಳಿಸಿದ್ದಾರೆ.
“ಕಳೆದ ಮಾರ್ಚ್ ತಿಂಗಳಲ್ಲಿ ಅಂತಿಮ ಪಟ್ಟಿ ಪ್ರಕಟಗೊಂಡಿತ್ತು. ಅದಾದ ನಂತರ ಯಾವುದೇ ಪ್ರಕ್ರಿಯೆಗಳು ಆರಂಭಗೊಂಡಿರುವುದಿಲ್ಲ. ಇದರಿಂದಾಗಿ ಪ್ರಾಮಾಣಿಕವಾಗಿ ಕಠಿಣ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯಥಿ೯ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾಜಿಕವಾಗಿ, ಆಥಿ೯ಕವಾಗಿ, ಮಾನಸಿಕವಾಗಿ ಜರ್ಜರಿತರಾಗಿದ್ದೇವೆ” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ದರ ಏರಿಕೆ ಹಿಂಪಡೆಯುವಂತೆ ಆಗ್ರಹ
ಈ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಸಚಿವರು ಸ್ಪಂದಿಸುವುದಾಗಿ ತಿಳಿಸಿದ್ದಾರೆ. ರಾಜ್ಯಪಾಲರಿಗೂ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಕೂಡಲೇ ಸ್ಪಂದಿಸದೆ ಹೋದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಹಾಯಕ ಪ್ರಾಧ್ಯಾಪಕರ ಬಳಗ ಎಚ್ಚರಿಕೆ ನೀಡಿದೆ.