ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಅಂತೆಯೇ, ಲಿಂಗತ್ವ ಅಲ್ಪಸಂಖ್ಯಾತರಿಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಬೇಕು. ಅಲ್ಲದೆ, ಎಲ್ಲ ಗ್ಯಾರಂಟಿ ಯೋಜನೆಗಳು ನಮಗೂ ಸಿಗಬೇಕು ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಮುದಾಯದ ಮುಖಂಡರು, “ಮಹಿಳೆಯರಿಗೆ ಉಚಿತ ಬಸ್ಗಳು ಸುಲಭವಾಗಿ ಸಿಗಬೇಕು. ಮಹಿಳೆಯರ ಜತೆಗೆ ಲೈಂಗಿಕ ಅಲ್ಪಸಂಖ್ಯಾತ ಸಮುದಾಯಕ್ಕೂ ಸೌಲಭ್ಯವನ್ನು ವಿಸ್ತರಿಸಬೇಕು. ಬಸ್ಗಳಲ್ಲಿ ಮಹಿಳೆಯರು ಮತ್ತು ವೃದ್ಧರಿಗೆ ಮಾತ್ರವಲ್ಲದೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಮೀಸಲು ಸೀಟುಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅಕ್ಕೈ ಪದ್ಮಶಾಲಿ, “ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ಸಮುದಾಯಕ್ಕೆ ಘನತೆಯ ಬದುಕನ್ನು ಒದಗಿಸಬೇಕು. ವಿಧಾನ ಪರಿಷತ್ನಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು” ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
“ಸಮಾಜದಲ್ಲಿ ನಮ್ಮನ್ನ ಮಕ್ಕಳು ಕಳ್ಳರು ಅಂತ ಹಣೆ ಪಟ್ಟಿ ಕಟ್ಟಿದ್ದಾರೆ. ನಾವು ಪ್ರಕೃತಿಗೆ ವಿರುದ್ಧವಾಗಿದ್ದೇವೆ ಅಂತ ಹೇಳ್ತಾರೆ. ಇಂತಹ ಸಂದರ್ಭದಲ್ಲಿ ನಾವು ನಮ್ಮ ಘನತೆಯನ್ನು ಗುರುತಿಸಿಕೊಳ್ಳಬೇಕು. ಸಂವಿಧಾನದ ಆಶಯಗಳಂತೆ ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡಬೇಕು” ಎಂದು ಅವರು ಒತ್ತಾಯಿಸಿದರು.