ಬೆಂಗಳೂರಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆ ಮಾಡುವವರು ಒಂದೇ ಸೂರಿನಡಿ (Single Window System) ಅನುಮತಿ ಪತ್ರನು ಪಡೆಯಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಅಧಿಕಾರಿಗಳು ಮತ್ತು ಬೆಂಗಳೂರು ನಗರ ಪೊಲೀಸರು ಬೆಂಗಳೂರಿನಲ್ಲಿ ‘ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ’ ನಡೆಸಿದ್ದಾರೆ. ಸಭೆಯಲ್ಲಿ ತುಷಾರ್ ಗಿರಿನಾಥ್ ಮಾತನಾಡಿದರು.
“ನಗರದಲ್ಲಿ 63 ಏಕಗವಾಕ್ಷಿ ಕೇಂದ್ರಗಳ ವಿಳಾಸ ಹಾಗೂ ಏಕಗವಾಕ್ಷಿ ಕೇಂದ್ರಗಳಲ್ಲಿರುವ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ಅದರನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ, ಒಂದೇ ಸ್ಥಳದಲ್ಲಿ 48 ಗಂಟೆಯೊಳಗೆ ಅನುಮತಿ ಪಡೆಯಬಹುದು” ಎಂದು ಹೇಳಿದರು.
“ಗಣೇಶ ವಿಸರ್ಜನೆಗಾಗಿ ಕೆರೆಗಳ ಬಳಿ ಕೌಂಟರ್ಗಳ ವ್ಯವಸ್ಥೆ ಮಾಡಿ ಅದಕ್ಕಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತದೆ. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿದ್ದು, ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೆ ಪರಿಸರ ಸ್ಹೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಬೇಕು. ಈ ಬಗ್ಗೆ ಎಲ್ಲರಲ್ಲೂ ಅರಿವು ಮೂಡಿಸಲಾಗುತ್ತಿದೆ. ಜೊತೆಗೆ, ವಿಸರ್ಜನಾ ಸ್ಥಳದಲ್ಲಿ ತ್ಯಾಜ್ಯವನ್ನು ಒಂದು ಕಡೆ ಮಾತ್ರ ಹಾಕಬೇಕೆಂದು ಸೂಚಿಸಲಾಗಿದೆ” ಎಂದರು.
“ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ. ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲಾಗುತ್ತದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? 2000 ಸರ್ವೇಯರ್, 354 ಸರ್ಕಾರಿ ಭೂ ಮಾಪಕರು, 1800 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ ಶೀಘ್ರ: ಸಚಿವ ಕೃಷ್ಣ ಭೈರೇಗೌಡ
“ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಕಲ್ಯಾಣಿಗಳ ಬಳಿ ಭದ್ರತೆಯ ದೃಷ್ಠಿಯಿಂದ ಪೊಲೀಸ್ ವ್ಯವಸ್ಥೆಯ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಲಾಗುವುದು” ಎಂದು ವಿವರಿಸಿದರು.
ಸಭೆಯಲ್ಲಿ ಗಣೇಶ ಪ್ರತಿಷ್ಠಾನದ ಆಯೋಜನಕರು ಹೇಳಿದ ಪ್ರಮುಖ ಅಂಶಗಳು:
- ಯಾವುದೇ ಜಾತಿ ಭೇದ ಭಾವವಿಲ್ಲದೆ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸುತ್ತೇವೆ.
- ಹಿಂದು-ಕ್ರೈಸ್ತ-ಮುಸ್ಲಿಂ ಸೇರಿ ಒಂದಾಗಿ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸುತ್ತೇವೆ.
- ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ನೀಡಲು ಮನವಿ.
- ಸ್ಯಾಂಕಿ ಟ್ಯಾಂಕಿ ಕಲ್ಯಾಣಿ ಬಳಿ ವಿದ್ಯುತ್ ದೀಪಗಳನ್ನು ಅಳವಡಿಸಿ.
- ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ಪತ್ರವನ್ನು ನೀಡಬೇಕು.
- ಹಲಸೂರು ಕೆರೆಯ ಕಲ್ಯಾಣಿಯನ್ನು ಇನ್ನೂ ಸ್ವಚ್ಛಗೊಳಿಸಿಲ್ಲ, ಕೂಡಲೆ ಸ್ವಚ್ಛಗೊಳಿಸಲು ಸೂಚನೆ ಕೊಡಿ.
- ಜೆಸಿ ನಗರದ ಬಳಿ ಗಣೇಶ ವಿಸರ್ಜನೆಯ ಮೆರವಣಿಗೆಯ ವೇಳೆ ಸಂಚಾರ ದಟ್ಟಣೆಯನ್ನು ನಿವಾರಣೆ ಮಾಡಿ.
- ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಬೆಸ್ಕಾಂ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಂಡು ಯಾವುದೇ ಅವಘಡ ನಡೆಯದಂತೆ ನೋಡಿಕೊಳ್ಳಬೇಕು.
- ಪಿಒಪಿ ಗಣೇಶ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳಿ,
ಸಭೆಯಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್, ಅಪರ ಪೊಲೀಸ್ ಆಯುಕ್ತರಾದ ಸತೀಶ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣ ಗುಪ್ತಾ(ಪೂರ್ವ), ಬೆಸ್ಕಾಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಗಣೇಶ ಪ್ರತಿಷ್ಠಾನದ ಆಯೋಜಕರು, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.